Sunday, August 21, 2011

ಅಣ್ಣಾ ಹಜಾರೆ ಹೋರಾಟ ಮತ್ತು ಮಟ್ಟೆಣ್ಣವರ್ ಬಾಂಬ್!


ಹೌದು...ಸಾಮಾಜಿಕ ಕಾರ್ಯಕರ್ತ, ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಭ್ರಷ್ಟಾಚಾರದ ವಿರುದ್ಧ ಪ್ರಬಲ ಜನಲೋಕಪಾಲ್ ಮಸೂದೆ ಜಾರಿಯಾಗಬೇಕೆಂದು ಪಟ್ಟು ಹಿಡಿದು ಚಳವಳಿಗೆ ಧುಮುಕಿರುವುದು ನಿಜಕ್ಕೂ ಇದೊಂದು ಪವಾಡ, ಭಾರತದಲ್ಲಿ ಎರಡನೇ ಸ್ವಾತಂತ್ರ್ಯದ ಸಂಗ್ರಾಮದ ಕಿಚ್ಚು ಎಂಬಂತ ವಾತಾವರಣ ಸೃಷ್ಠಿಯಾಗಿದೆ ಎಂಬ ಮಾತಿನಲ್ಲಿ ಉತ್ಪ್ರೇಕ್ಷೆ ಇದೆ ಎಂದು ವಾದಿಸಬಹುದು. ಆದರೆ ಇದು ಸಹಜ ಯಾಕೆಂದರೆ ಭ್ರಷ್ಟಾಚಾರದ ಕಬಂಧ ಬಾಹು ಮಿತಿಮೀರಿ ಹೋಗಿದೆ. ಅಷ್ಟೇ ಅಲ್ಲ ಅದು ಅತಿ ಹೆಚ್ಚು ಬಾಧಿಸಿದ್ದು ಜನಸಾಮಾನ್ಯರನ್ನ. ತಳಮಟ್ಟದಿಂದ ಹಿಡಿದು ಉನ್ನತ ಮಟ್ಟದವರೆಗೂ ಭ್ರಷ್ಟಾಚಾರದ ವಿರಾಟ್ ರೂಪ ತೋರಿದೆ. ಸ್ವಾತಂತ್ರ್ಯ ನಂತರ ದೇಶದ, ನಮ್ಮ ಜನಪ್ರತಿನಿಧಿಗಳ ಪ್ರಗತಿಯ ಜತೆ, ಜತೆಯಾಗಿಯೇ ಭ್ರಷ್ಟಾಚಾರವೂ ಎಗ್ಗಿಲ್ಲದೆ ಬೆಳೆಯುವ ಮೂಲಕ ಅಟ್ಟಹಾಸಗೈಯುತ್ತಿರುವುದು ಎಲ್ಲರ ಕಣ್ಮುಂದೆ ಇರುವ ವಾಸ್ತವ. ಕೆಲ ವರ್ಷಗಳ ಹಿಂದಷ್ಟೇ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಗಿರೀಶ್ ಮಟ್ಟೆಣ್ಣವರ್ ಶಾಸಕರ ಭವನಕ್ಕೆ ಬಾಂಬ್ ಇಟ್ಟು ಸುದ್ದಿ ಮಾಡಿದ್ದರು. ಅದೊಂದು ಬಾಲಿಶ, ಹುಚ್ಚುತನದ ಪರಮಾವಧಿ ಎಂದು ನಾವು ವಾದಿಸಬಹುದು.

ಕಾನೂನಿನ ಪ್ರಕಾರ ಒಪ್ಪಲಾಗದಿದ್ದರೂ, ಈ ದೇಶದ ಹಿತ ಕಾಯುವ ಪ್ರತಿಯೊಬ್ಬನೊಳಗೂ ಭ್ರಷ್ಟಾಚಾರದ ವಿರುದ್ಧ ಒಳಗೆ ಅದುಮಿಕೊಂಡಿದ್ದ ಆಕ್ರೋಶದ ಫಲ ಅದಾಗಿತ್ತು. ಆದರೆ ಮಟ್ಟೆಣ್ಣ ಕೇವಲ ಸುದ್ದಿಯಷ್ಟೇ ಮಾಡಿದ್ದು ಬಿಟ್ಟರೆ ಅದರಲ್ಲಿ ಇನ್ಯಾವುದೇ ಕ್ರಾಂತಿ ನಡೆಯಲಿಲ್ಲ. ಅದು ಅವರಿಂದ ಸಾಧ್ಯವೂ ಆಗಿಲ್ಲ ಎಂಬುದು ಅಷ್ಟೇ ಸತ್ಯ.

ಇದೀಗ ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿದೆ. ಎಲ್ಲರೊಳಗೂ ಕುದಿಯುತ್ತಿದ್ದ ಭ್ರಷ್ಟಾಚಾರದ ವಿರುದ್ಧದ ಆಕ್ರೋಶಕ್ಕೆ ಅಣ್ಣಾ ಹಜಾರೆ ಒಂದು ಕಾರಣರಾಗಿದ್ದಾರೆ. ಅದಕ್ಕಾಗಿಯೇ ದೇಶಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ವಿದ್ಯಾರ್ಥಿಗಳು, ಯುವ ಸಮುದಾಯ, ಮಹಿಳೆಯರು, ಹಿರಿಯರು ಸಾಥ್ ನೀಡಿದ್ದಾರೆ. ವಿಪರ್ಯಾಸವೆಂದರೆ ಬರೇ ಕೋಮುವಾದದ ವಿರುದ್ಧ ಬಾಯ್ದೆರೆದು ಬೊಬ್ಬಿರಿಯುತ್ತಿದ್ದ ಸಾಹಿತಿಗಳು ಮತ್ತು ಬುದ್ಧಿಜೀವಿಗಳು ಮೌನಕ್ಕೆ ಶರಣಾಗಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನತ್ತ ಯಾವೊಬ್ಬ ಹಿರಿಯ ಸಾಹಿತಿಯೂ ತಲೆ ಹಾಕಿಲ್ಲ. ಧರಣಿ ನಡೆಸುತ್ತಿರುವವರಿಗೆ ನೈತಿಕ ಬೆಂಬಲವನ್ನೂ ಘೋಷಿಸಿಲ್ಲ! ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ, ನಿಷ್ಠೆಯಿಂದ ಕೆಲಸ ಮಾಡಿದ ಐಪಿಎಸ್ ಅಧಿಕಾರಿಯಾಗಲಿ ಅಥವಾ ಇನ್ಯಾವುದೇ ಅಧಿಕಾರಿಯನ್ನಾಗಲಿ ನಮ್ಮ ಸರ್ಕಾರಗಳು ಯಾವ ರೀತಿ ನಡೆಸಿಕೊಂಡಿವೆ ಎಂಬ ಸತ್ಯ ಎಲ್ಲರಿಗೂ ತಿಳಿದಿದೆ. ಎಲ್ಲದಕ್ಕಿಂತ ದುರಂತವೆಂದರೆ ಭ್ರಷ್ಟಾಚಾರದ ವಿರುದ್ಧ ಹೋರಾಡುವವರನ್ನು ಜನಪ್ರತಿನಿಧಿಗಳು, ಸರ್ಕಾರ ವ್ಯವಸ್ಥಿತವಾಗಿ ಹೇಗೆ ಹತ್ತಿಕ್ಕುತ್ತೇ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಭ್ರಷ್ಟಾಚಾರ ತಡೆಗೆ ಪ್ರಬಲ ಕಾಯ್ದೆ ಬೇಕೆಂದು ಜನ ಬೀದಿಗಿಳಿದರೂ ಕೂಡ ನಮ್ಮನ್ನು ಆಳುವ ನಾಯಕರ ನಡವಳಿಕೆ ಪ್ರಜಾಪ್ರಭುತ್ವಕ್ಕೆ ಕಳಂಕ. ಕಾಂಗ್ರೆಸ್ ವಕ್ತಾರ ಮನೀಷ್ ತಿವಾರಿ, ಸಚಿವರಾದ ಕಪಿಲ್ ಸಿಬಲ್, ಪಿ.ಚಿದಂಬರಂ ಹೇಳಿಕೆಗಳನ್ನೇ ಗಮನಿಸಿ, ತಮ್ಮನ್ನ ತಾವು ರಕ್ಷಿಸಿಕೊಳ್ಳಲು ಇವರು ಯಾರನ್ನ ಬೇಕಾದರೂ ಭ್ರಷ್ಟರನ್ನಾಗಿ ಮಾಡುತ್ತಾರೆ ಮತ್ತು ಅದನ್ನ ತಮ್ಮ ಮೂಗಿನ ನೇರಕ್ಕೆ ಸಮರ್ಥಿಸಿಕೊಳ್ಳುತ್ತಾರೆ. ಇಂತಹ ಅಪದ್ಧಗಳಿಂದಾಗಿಯೇ ಯುಪಿಎ ತನ್ನ ಮೇಲೆ ತಾನೇ ಚಪ್ಪಡಿ ಎಳೆದುಕೊಂಡು ಅವಸಾನದತ್ತ ಸಾಗಲು ಹೊರಟಿದೆ. ಪ್ರಬಲ ಜನಲೋಕ ಪಾಲ್ ಮಸೂದೆ ಜಾರಿಗೆ ತರಲು ಯಾವ ಪಕ್ಷಗಳಿಗೂ ಇಚ್ಛಾಶಕ್ತಿ ಇಲ್ಲ. ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ಲೋಕಾಯುಕ್ತಕ್ಕೆ ಪರಮಾಧಿಕಾರ ಕೊಡುವುದಾಗಿ ಭರವಸೆ ನೀಡಿತ್ತು. ಆ ಕೆಲಸವನ್ನೂ ಮಾಡಿಲ್ಲ. ನಮ್ಮನ್ನಾಳುವ ಜನಪ್ರತಿನಿಧಿಗಳು ಏನನ್ನ ಮಾಡಬೇಕು ಅದನ್ನ ಮಾಡದೇ ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದರಲ್ಲಿ ಮಹಾ ನಿಸ್ಸೀಮರು.

ಅಣ್ಣಾ ಹಜಾರೆಗೆ ದೇಶಾದ್ಯಂತ ಜನ ಬೆಂಬಲ ನೀಡುವುದನ್ನು ಕಂಡು ನಡುಗಿ ಹೋಗಿದ್ದರೂ ಕೂಡ, ಮತ್ತೊಂದೆಡೆ ಬಹುಶಃ ಅಣ್ಣಾ ಹೋರಾಟದ ಹಿಂದೆ ವಿದೇಶಿ ಶಕ್ತಿಗಳ ಕೈವಾಡ ಇದೆ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಶೀದ್ ಅಲ್ವಿ ಪೆಕರುಪೆಕರಾಗಿ ಹೇಳಿಕೆ ಕೊಟ್ಟಿದ್ದರು. ರಾಜಕಾರಣಿಗಳ ನೈತಿಕ ದಿವಾಳಿತನಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಾ? ಅಣ್ಣಾ ಏಕಾಂಗಿಯಾಗಿದ್ದರು, ಅವರಿಗೆ ಯಾವುದೇ ಸಂಘಟನೆಗಳಿರಲಿಲ್ಲ. ಕೆಲವೊಂದಷ್ಟು ಮಿತ್ರರು ಮಾತ್ರ ಇದ್ದರು. ಹಾಗಾದ್ರೆ ಅವರ ಆಂದೋಲನಕ್ಕೆ ಇಷ್ಟೊಂದು ಜನಬೆಂಬಲ ಸಿಕ್ಕಿದ್ದು ಹೇಗೆ ಎಂಬುದಾಗಿ ಪ್ರಶ್ನಿಸುವ ಕಾಂಗ್ರೆಸ್ ಮೊದಲು ತನ್ನನ್ನು ತಾನು ಪ್ರಶ್ನಿಸಿಕೊಳ್ಳಬೇಕು.

ಅಣ್ಣಾ ಹಜಾರೆ ಒಂದು ಕರೆಗೆ ಜನ ಯಾಕೆ ಇಷ್ಟೊಂದು ಪ್ರಮಾಣದಲ್ಲಿ ಬೆಂಬಲ ನೀಡುತ್ತಿದ್ದಾರೆ....ಇದು ಬಾಡಿಗೆ ಹಣ ಕೊಟ್ಟು ಕರೆತಂದ ಜನರಲ್ಲ, ಜನರೇ ಸ್ವಯಂ ಪ್ರೇರಿತರಾಗಿ ಬೀದಿಗಿಳಿದಿದ್ದಾರೆ. ಮತ್ತೆ ಇದು ಪ್ರಜಾತಂತ್ರದಲ್ಲಿ ಪ್ರಬಲ ಜನಲೋಕಪಾಲ್ ಕಾಯ್ದೆ ಜಾರಿಯಾಗಬೇಕು ಎಂಬುದು ಜನರ ಹಕ್ಕೊತ್ತಾಯವಾಗಿದೆ ಎಂಬುದನ್ನ ತಿಳಿದುಕೊಳ್ಳಬೇಕಾಗಿದೆ. ಹಾಗಂತ ಜನಲೋಕಪಾಲ್ ಜಾರಿಯಾದ ಕೂಡಲೇ ದೇಶ ಸಂಪೂರ್ಣ ಭ್ರಷ್ಟಾಚಾರ ಮುಕ್ತವಾಗುತ್ತೆ ಎಂದೇನಲ್ಲ. ಯಾಕೆಂದರೆ ಈ ದೇಶದಲ್ಲಿ ಸುಧಾರಣೆಯಾಗಬೇಕಾದದ್ದು ಇನ್ನೂ ಬಹಳಷ್ಟಿದೆ. ಚುನಾವಣಾ ವ್ಯವಸ್ಥೆ ಕೂಡ ಅಷ್ಟೇ ಮುಖ್ಯ. ಆಳುವ ವರ್ಗ ಎಷ್ಟು ಭ್ರಷ್ಟವಾಗಿದೆಯೋ, ನಾವು ಕೂಡ ಅಷ್ಚೇ ಭ್ರಷ್ಟರಾಗಿದ್ದೇವೆ.

ನಾವೇ ಎಂತಹವರನ್ನ ಆರಿಸಿ ಕಳುಹಿಸಿದ್ದೇವೆ ಎಂಬುದನ್ನ ಆತ್ಮಾವಲೋಕನ ಮಾಡಿಕೊಂಡರೆ ಚುನಾವಣಾ ವ್ಯವಸ್ಥೆ, ಬಗೆಹರಿಯದ ರೈತರ ಸಮಸ್ಯೆ, ಕೈಗಾರಿಕೆಯ ಹೆಸರಿನಲ್ಲಿ ಮಾಡುತ್ತಿರುವ ಲೂಟಿ, ರಾಜಕಾರಣಿಗಳ ಧನದಾಹ, ಭೂದಾಹದ ಬಗ್ಗೆ ತಿಳಿಯುತ್ತದೆ. ನೈತಿಕತೆಯನ್ನೇ ಮರೆತು ವರ್ತಿಸುತ್ತಿರುವ ಇಂತಹ ಜನವಿರೋಧಿ ಸರ್ಕಾರಕ್ಕೆ ಬೀದಿಗಿಳಿದು ಹೋರಾಟ ಮಾಡಲೇಬೇಕಾಗಿದೆ. ಆ ನಿಟ್ಟಿನಲ್ಲಾದರೂ ಅಣ್ಣಾ ಹಜಾರೆ ಹೋರಾಟ ಒಂದು ತಾರ್ಕಿಕ ಅಂತ್ಯ ಕಂಡು ಯಶಗಳಿಸಿದರೆ ಅದು ಪ್ರಜಾಪ್ರಭುತ್ವಕ್ಕೆ, ಜನಸಾಮಾನ್ಯರಿಗೆ ದೊರೆತ ನಿಜವಾದ ಜಯವಾಗಲಿದೆ...ಅಲ್ಲದೇ ಇತಿಹಾಸ ಮರೆತರೆ ಅದರ ಪರಿಣಾಮ ಏನು ಹಾಗೂ ಜನವಿರೋಧಿಯಾಗಿ ಉಡಾಫೆಯಿಂದ ನಡೆದುಕೊಂಡರೆ ಅದರ ಫಲಿತಾಂಶ ಏನಾಗಲಿದೆ ಎಂಬುದು ಅಣ್ಣಾ ಹಜಾರೆಯ ಈ ಹೋರಾಟ ರಾಜಕೀಯ ಪಕ್ಷಗಳಿಗೊಂದು ಪಾಠವಾಗಲಿದೆ.

Sunday, December 5, 2010

ಜನರ ವಿಶ್ವಾಸಕ್ಕೆ ಕೊಳ್ಳಿ ಇಟ್ಟ ಭಂಡ ಸಿಎಂ ಯಡಿಯೂರಪ್ಪ!


ರಾಜ್ಯರಾಜಕಾರಣದಲ್ಲಿ ಮತ್ತೊಮ್ಮೆ ಭೂಗಳ್ಳತನದ ಆರೋಪ-ಪ್ರತ್ಯಾರೋಪ ಕೇಳಿ ಬರತೊಡಗಿದೆ. ಆದರೆ ಈಗಾಗಲೇ ಎ.ಟಿ.ರಾಮಸ್ವಾಮಿ ನೇತೃತ್ವದ ಸಮಿತಿ ಶ್ಲಾಘನೀಯ ಕೆಲಸ ಕೈಗೊಂಡಿದ್ದು, ಸುಮಾರು ಮೂವತ್ತು ಸಾವಿರ ಕೋಟಿಗೂ ಹೆಚ್ಚು ಬೆಲೆ ಬಾಳುವ ಇಪ್ಪತ್ತು ಸಾವಿರ ಎಕರೆ ಭೂಗಳ್ಳತನವನ್ನು ಪತ್ತೆ ಹಚ್ಚಿದ್ದಾರೆ. ಅಷ್ಟೇ ಅಲ್ಲ ಭೂಗಳ್ಳರ ಜತೆ ಶಾಮೀಲಾದ ಮುನ್ನೂರು ಕಂದಾಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಮಿತಿ ಸರಕಾರಕ್ಕೆ ಶಿಫಾರಸು ಮಾಡಿತ್ತು.

ಈ ಲೂಟಿಯಲ್ಲಿ ಅತಿರಥ-ಮಹಾರಥ ಜನನಾಯಕರೇ ಪ್ರಮುಖ ಫಲಾನುಭವಿಗಳಾಗಿದ್ದಾರೆ. ಆದರೆ ಎ.ಟಿ.ರಾಮಸ್ವಾಮಿ ನೇತೃತ್ವದ ಸಮಿತಿಯನ್ನು ಅಂದಿನ ಬಿಜೆಪಿ-ಜೆಡಿಎಸ್ ಸರಕಾರದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿ.ಎಸ್.ಯಡಿಯೂರಪ್ಪ ರಚಿಸಿದ್ದರು. ವಿಪರ್ಯಾಸವೆಂದರೆ ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪ ಅಧಿಕಾರದ ಗದ್ದುಗೆಗೆ ಏರಿ ಎರಡೂವರೆ ವರ್ಷ ಕಳೆದಿದೆ. ಈ ಸರಕಾರಕ್ಕೆ ನಿಜಕ್ಕೂ ಜನಪರ ಕಾಳಜಿ, ರಾಜಕೀಯ ಇಚ್ಛಾಶಕ್ತಿ ಇದ್ದಿದ್ದರೆ ಎ.ಟಿ.ರಾಮಸ್ವಾಮಿ ನೀಡಿದ್ದ ವರದಿಯ ಬಗ್ಗೆ ಕಠಿಣ ನಿರ್ಧಾರ ಕೈಗೊಳ್ಳಬೇಕಿತ್ತು. ಆ ನಿಟ್ಟಿನಲ್ಲಾದರೂ ಘಟಾನುಘಟಿ ಭೂಗಳ್ಳರ ಕಳ್ಳಾಟಿಗೆ ಬಯಲಾಗುತ್ತಿತ್ತು. ಅಷ್ಟೇ ಅಲ್ಲ ಸಾವಿರಾರು ಕೋಟಿ ರೂ.ಬೆಲೆ ಬಾಳುವ ಭೂಮಿಯನ್ನು ವಶಪಡಿಸಿಕೊಳ್ಳಲು ದಿಟ್ಟ ಹೆಜ್ಜೆ ಇಡಬಹುದಿತ್ತು.

ಅದ್ಯಾಕೋ ಕಳೆದ ಐದು ದಶಕಗಳ ಕಾಲ (ಜನತಾ ಪರಿವಾರ ಹೊರತುಪಡಿಸಿ) ಕಾಂಗ್ರೆಸ್ಸಿಗರ ದ್ವೇಷದ, ಲೂಟಿಕೋರ ರಾಜಕಾರಣ ಕಂಡು ಬೇಸತ್ತಿದ್ದ ರಾಜ್ಯದ ಜನರಿಗೆ ಒಂದು ಬದಲಾವಣೆ ಕಾಣಬೇಕಿತ್ತು. ಹಾಗಾಗಿ ಈ ಹಿಂದಿನವರ ಹಾಗೇ ನಾವಲ್ಲ, ತತ್ವ, ಸಿದ್ದಾಂತ ಎಂದೆಲ್ಲ ಬೊಂಬಡ ಬಜಾಯಿಸಿ, ಹಸಿರು ಶಾಲು ಹೊದ್ದು ಅಧಿಕಾರದ ಗದ್ದುಗೆ ಏರಿದ್ದ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಕೇವಲ ಎರಡೂವರೆ ವರ್ಷಗಳಲ್ಲಿಯೇ ಎಲ್ಲರೂ ನಿರೀಕ್ಷೆ ಹುಸಿಗೊಳಿಸಿ ಲೂಟಿಕೋರ, ಭ್ರಷ್ಟಚಾರದ ರಾಜಕಾರಣಕ್ಕೆ ಇಳಿದಿರುವುದು ದುರಂತ.

ಈಗ ಪ್ರತಿಪಕ್ಷಗಳು ಯಾವುದೇ ಆರೋಪ ಮಾಡಿದರೂ ನೀವು ಈ ಹಿಂದೆ ಏನು ಮಾಡಿದ್ದೀರಿ ಎಂದು ಬಾಯ್ಮುಚ್ಚಿಸುವ ರಾಜಕಾರಣ ಮಾಡುವ ಮೂಲಕ ತಾವು ಕೂಡ ಲೂಟಿ ಮಾಡಲು ಬಂದವರು. ನೀವು ಈ ಹಿಂದೆ ಮೇಯ್ದಿದ್ದೀರಿ. ನಾವೂ ಒಂದಿಷ್ಟು ಮೇಯುತ್ತೇವೆ ಎಂಬ ಧಾಟಿಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷ ನಡೆದುಕೊಳ್ಳುತ್ತಿದೆ. ರಾಜಕಾರಣಿಗಳ ಮಟ್ಟಿಗೆ ಮಾನ, ಮರ್ಯಾದೆ, ನೈತಿಕತೆ ಎಂಬ ಶಬ್ದವನ್ನು ಬಳಸುವುದೇ ಅಸಂಬದ್ಧ. ಯಾಕೆಂದರೆ ಪ್ರಸಕ್ತ ರಾಜಕಾರಣದಲ್ಲಿ ಆ ಶಬ್ದಗಳಿಗೆ ತದ್ವಿರುದ್ದವಾಗಿ ನಡೆದುಕೊಳ್ಳುತ್ತಿರುವುದು ಪ್ರತಿದಿನವೂ ಸಾಬೀತಾಗುತ್ತಿದೆ.

ತಾವು ಕಾಂಗ್ರೆಸ್, ಜೆಡಿಎಸ್‌ಗಿಂತ ಭಿನ್ನ, ರಾಜ್ಯದ ಅಭಿವೃದ್ಧಿಯೇ ಮುಖ್ಯ ಎಂಬ ಇಚ್ಛಾಶಕ್ತಿ ಬಿಜೆಪಿಗೆ ಇದ್ದಿದ್ದರೆ. ಇಂತಹ ಲೂಟಿಗೆ ಇಳಿಯುತ್ತಿರಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಸೇಡಿನ ರಾಜಕಾರಣಕ್ಕೂ ಇಳಿಯುತ್ತಿರಲಿಲ್ಲ. ಕಾಂಗ್ರೆಸ್ ವಂಶಪಾರಂಪರ್ಯ ರಾಜಕೀಯ ಮಾಡುತ್ತಿದೆ. ಅಪ್ಪ, ಮಕ್ಕಳು ಆಸ್ತಿ ಮಾಡಿದ್ದಾರೆ, ಲೂಟಿ ಮಾಡುತ್ತಿದ್ದಾರೆ ಎಂದೆಲ್ಲ ಅಬ್ಬರಿಸಿದ್ದ ಯಡ್ಡಿಯೇ ಈಗ ತಮ್ಮ ಕುಟುಂಬದ ಸಮಸ್ತ ಕಲ್ಯಾಣಕ್ಕೆ ಇಳಿದುಬಿಟ್ಟಿದ್ದಾರೆ. ಸಾಲದೆಂಬಂತೆ ಭೂ ಹಗರಣ ತನಿಖೆಯನ್ನು ಲೋಕಾಯುಕ್ತರು ನಡೆಸುತ್ತಿದ್ದರು ಕೂಡ ಮತ್ತೆ ನ್ಯಾ.ಪದ್ಮರಾಜ್ ನೇತೃತ್ವದ ಆಯೋಗ ರಚಿಸಿದ್ದಾರೆ.

ಅವೆಲ್ಲಕ್ಕಿಂತ ಅಸಹ್ಯ ಹುಟ್ಟಿಸುತ್ತಿರುವುದು ತಾವು ಕಳ್ಳರಾದರೂ ಕೂಡ ಇಡೀ ಭಾಜಪದ ಮುಖಂಡರು ಮುಖ್ಯಮಂತ್ರಿಯನ್ನು ಸೇರಿದಂತೆ ಎಲ್ಲರೂ ಸಮರ್ಥಿಸಿಕೊಳ್ಳುತ್ತಿರುವುದು. ಈ ಹಿಂದೆ ಭೂ ಹಗರಣದಲ್ಲಿ ಕಟ್ಟಾ ಸುಬ್ರಹ್ಮಣ್ಯ ವಿರುದ್ಧ ಆರೋಪ ಕೇಳಿಬಂದಾಗ ರಾಜೀನಾಮೆ ನೀಡಬೇಕೆಂಬ ಒತ್ತಡವನ್ನು ಪ್ರತಿಪಕ್ಷಗಳು ಹೇರಿದ್ದವು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಮಕ್ಕಳು ಮಾಡಿದ ತಪ್ಪಿಗೆ ಅಪ್ಪನಿಗೆ ಯಾಕೆ ಶಿಕ್ಷೆ ಎಂದು ಪ್ರಶ್ನಿಸಿದ್ದರು. ಏತನ್ಮಧ್ಯೆಯೇ ಖುದ್ದು ಮುಖ್ಯಮಂತ್ರಿಗಳೇ ತಮ್ಮ ಮಕ್ಕಳಿಗೆ, ಅಳಿಯನಿಗೆ ಭೂಮಿ ನೀಡಿದ ಆರೋಪದಲ್ಲಿ ತಾವೇ ಕುರ್ಚಿ ಕಳೆದುಕೊಳ್ಳುವ ಸಂದರ್ಭ ಎದುರಾದಾಗ ಕೋಟ್ಯಂತರ ರೂಪಾಯಿ ಪಕ್ಷದ ಹೈಕಮಾಂಡ್ ವರಿಷ್ಠರಿಗೆ ಕಪ್ಪ ನೀಡಿ ಮತ್ತೆ ವಿರಾಜಮಾನರಾಗಿದ್ದಾರೆ. ಇನ್ಮುಂದೆ ತನ್ನ ಕುಟುಂಬದ ಸದಸ್ಯರನ್ನು ದೂರು ಇಡುವುದಾಗಿಯೂ ಘೋಷಿಸಿದರು. ಈ ರಾದ್ಧಾಂತ ನಡೆಯುತ್ತಿರುವ ಬೆನ್ನಲ್ಲೇ ಲೋಕಾಯುಕ್ತರು ಐಟಿ-ಬಿಟಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಎಫ್ಐಆರ್ ದಾಖಲಿಸಿದ ಪರಿಣಾಮ ನಾಯ್ಡು ಏಕಾಏಕಿ ರಾಜೀನಾಮೆ ಸಲ್ಲಿಸಿದ್ದಾರೆ.

ಮಕ್ಕಳು ಮಾಡಿದ ತಪ್ಪಿಗೆ ಅಪ್ಪನಿಗೆ ಯಾಕೆ ಶಿಕ್ಷೆ? ಆರೋಪ ಮಾಡಿದ ಕೂಡಲೇ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದೆಲ್ಲ ಸಮರ್ಥನೆ, ಸಮಜಾಯಿಷಿ ನೀಡುತ್ತಿದ್ದರು. ಅಚ್ಚರಿ ಏನಪ್ಪಾ ಅಂದರೆ ಕಟ್ಟಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದಿರುವುದಾಗಿ ಬಿಜೆಪಿ ಮುಖಂಡರು ಸಾರುತ್ತಿದ್ದಾರೆ! ಅಷ್ಟಕ್ಕೂ ಸಾಲದೆಂಬಂತೆ ಎಫ್ಐಆರ್ ಮಾತ್ರ ಹಾಕಿರುವುದು ನಮಗೆ ನ್ಯಾಯಾಲಯದ ಮೇಲೆ ವಿಶ್ವಾಸ ಇರುವುದಾಗಿಯೂ ನಾಯ್ಡು ಮಹಾನುಭಾವ ಅತಿ ಆತ್ಮವಿಶ್ವಾಸ ವ್ಯಕ್ತಪಡಿಸುತ್ತಿರುವುದನ್ನು ಕೇಳಿದರೆ ನಗಬೇಕೋ, ಅಳಬೇಕೋ ತಿಳಿಯುತ್ತಿಲ್ಲ.

ರಾಜ್ಯ ರಾಜಕಾರಣದಲ್ಲಿ ಕಳೆದ ಐದು ದಶಕಗಳಲ್ಲಿ ರಾಜ್ಯದ ಸಂಪತ್ತನ್ನು ವ್ಯವಸ್ಥಿತವಾಗಿ ಲೂಟಿ ಹೊಡೆದ ಖದೀಮರು ಒಂದಲ್ಲ ಒಂದು ಕಾಲದಲ್ಲಿ ರಾಜ್ಯದ ಆಡಳಿತವನ್ನು ನಿಯಂತ್ರಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಸುತ್ತಮುತ್ತಲ ನೂರಾರು ಎಕರೆ, ಅರಣ್ಯ ಭೂಮಿ, ದರಖಾಸ್ತು ಜಮೀನು, ಗೋಮಾಳ, ಕೆರೆಕಟ್ಟೆಯನ್ನು ಒಂದೆಡೆ ಕಾಂಗ್ರೆಸ್ಸಿಗರು ಮತ್ತೊಂದೆಡೆ ಖೋಡೆ ಧಣಿಗಳ ಪಾಲಾಗಿದೆ. ಇಂತಹ ನುಂಗಣ್ಣಗಳನ್ನು ದೂರವಿಟ್ಟು ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದ ಗದ್ದುಗೆ ಏರಿಸಿದ್ದರ (ರೆಡ್ಡಿ ಬ್ರದರ್ಸ್ ಸೇರಿದಂತೆ ಹಲವರ ಮೇಲೆ ಭ್ರಷ್ಟಾಚಾರಾ, ಮೈನಿಂಗ್ ಮಾಫಿಯಾ, ಭೂ ಹಗರಣದ ಆರೋಪ) ಫಲಿತಾಂಶ ರಾಜ್ಯದ ಜನರಿಗೆ ಎರಡೂವರೆ ವರ್ಷಗಳಲ್ಲಿಯೇ ಜಗಜ್ಜಾಹೀರಾಗಿದೆ. ಬಿಹಾರದಲ್ಲಿ (ಲಾಲೂವಿನ ಗೂಂಡಾ ರಾಜ್ಯ ) ಜನಪರ ಆಡಳಿತ ನೋಡಿ ನಿತೀಶ್ ಕುಮಾರ್ ಅವರನ್ನು ಎರಡನೇ ಬಾರಿಗೆ ಮತದಾರರ ಆಯ್ಕೆ ಮಾಡಿದ್ದಾನೆ. ಕರ್ನಾಟಕದಲ್ಲಿ ಯಡಿಯೂರಪ್ಪ ಜನರ ವಿಶ್ವಾಸ, ಕನಸನ್ನು ನುಚ್ಚು ಮಾಡಿದ್ದಾರೆ. ಇದು ಇಬ್ಬರ ನಾಯಕರ ನಡುವೆ ಇರುವ ವ್ಯತ್ಯಾಸ ಅಷ್ಟೇ! ಹಾಗಾಗಿ ಮುಂದಿನ ಚುನಾವಣೆಯಲ್ಲಿ ಯಡಿಯೂರಪ್ಪ ಒಬ್ಬ ಭಂಡ, ಭ್ರಷ್ಟ, ಲಚ್ಚೆಗೆಟ್ಟ ಮುಖಂಡರಾಗಿ ಬಿಂಬಿತರಾಗಬಹುದೇ ಹೊರತು, ಜನಪರ ನಾಯಕನಾಗಿ ಅಲ್ಲ ಎಂಬುದನ್ನು ಮನಗಾಣಬೇಕಾಗಿದೆ....

Monday, August 17, 2009

ತಿರುವಳ್ಳುವರ್...ಸಾಕ್ರೆಟೀಸ್ ಮತ್ತು ನಮ್ಮ ಸ್ವಭಾವ

ಇದು ಸಾಮಾನ್ಯ ಎಂಬಂತೆ ನಾವೇ ಆಗಾಗ ಸಹೋದ್ಯೋಗಿಗಳಿಗೆ ಅಥವಾ ಹೆಚ್ಚಿನವರು ಒಂದಲ್ಲ ಒಂದು ಬಾರಿ ಇಂತಹ ಹೇಳಿಕೆಯನ್ನು ಕೇಳಿರುತ್ತೇವೆ ಇಲ್ಲ ನಾವೇ ಆಡಿರುತ್ತೇವೆ. ಯಾರಾದರೂ ಅವರ ಪಾಡಿಗೆ ಖುಷಿಯಿಂದ ಇದ್ದರೂ ಸಾಕು ಏನು...? ಬಹಳ ಖುಷಿಯಿಂದ ಇದ್ದ ಹಾಗೆ ಇದೆ...ಲಾಟರಿ ಏನಾದ್ರು ಬಂತಾ ಅಂತ . ಹಾಗಂತ ಜೋಲು ಮೋರೆ ಹಾಕಿ ಇರಿ...ಏನೋ ಆತ ಯಾವಾಗ್ಲೂ ಹಾಗೆ ತಲೆ ಮೇಲೆ ಆಕಾಶ ಬಿದ್ದವರ ತರ ಇರ್ತಾನೆ ಅಂದುಕೊಂಡು ಸುಮ್ಮನಾಗ್ತಾರೆ. ಮೂಲತಃ ಮನುಷ್ಯನ ಸ್ವಭಾವವೇ ತಿಕ್ಕಲುತನದ್ದು. ಯಾಕೆಂದರೆ ಜನ ಚಳವಳಿ ಮಾಡಿದರೂ ಟೀಕಿಸುತ್ತೇವೆ, ಮಾಡದಿದ್ದರೂ ವಟಗುಟ್ಟುತ್ತೇವೆ. ಅದಕ್ಕೆ ಇತ್ತೀಚೆಗೆ ತಿರುವಳ್ಳುವರ್-ಸರ್ವಜ್ಞ ಪ್ರತಿಮೆ ಸ್ಥಾಪನೆ ವೇಳೆ ಕನ್ನಡಪರ ಸಂಘಟೆಗಳು ವ್ಯಕ್ತಪಡಿಸಿದ ಪ್ರತಿಭಟನೆಗೆ ಪರ-ವಿರೋಧ ವ್ಯಕ್ತವಾಗಿದ್ದು ಕೂಡ ಒಂದು ಉದಾಹರಣೆ. ಡಿ.ಎಸ್.ನಾಗಭೂಷಣ್‌ರಂತವರು ಕೂಡ 'ಗಲಾಟೆ ಸಂಘಟನೆ'ಗಳು ಅಂತ ಹೇಳಿಕೆ ನೀಡಿದರು. ಪ್ರತಿ ನೆಲದಲ್ಲೂ ಹುಟ್ಟಿಕೊಂಡ ಚಳವಳಿಗಳು ಅವುಗಳು ಮೂಡಿಸಿದ್ದ ಛಾಪು ಕಡೆಗಣಿಸುವಂತಹದ್ದಲ್ಲ. ಈ ಬಗ್ಗೆ ಆತ್ಮೀಯರಾದ ದಿನೇಶ್ ಕುಮಾರ್ ಅವರು ತಮ್ಮ 'ದೇಸಿಮಾತು' ಬ್ಲಾಗ್‌ನಲ್ಲಿ ಉತ್ತಮವಾದ ಲೇಖನವೊಂದನ್ನು ಬರೆದಿದ್ದಾರೆ.

ಆದರೆ ನಾನು ಪರ-ವಿರೋಧದ ಹಿನ್ನೆಲೆ-ಮುನ್ನೆಲೆ ಬಗ್ಗೆ ಲೇಖನ ಮುಂದುವರಿಸಲಾರೆ. ಯಾಕೆಂದರೆ ಚೆನ್ನೈನಲ್ಲಿ ಪ್ರತಿಮೆ ಅನಾವರಣ ಸೇರಿದಂತೆ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ವೇಳೆ ಕೆಲವು ಮಾಧ್ಯಮಗಳು ಎಷ್ಟು ವಸ್ತುನಿಷ್ಠವಾಗಿ ವರದಿ ಮಾಡಿದ್ದೇವೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಿದ್ದೇವೆ. ಮನುಷ್ಯ ಪ್ರತಿಯೊಂದಕ್ಕೂ ತಕರಾರು ತೆಗೆಯುತ್ತಿರುತ್ತಾನೆ, ಅದು ಹುಟ್ಟುಗುಣ ಎಂಬಂತೆ ಅದೊಂದು ಅಂಟು ಜಾಢ್ಯವಾಗಿದೆ. ಈ ಬಗ್ಗೆ ರಜನೀಶರ ಹಾಸ್ಯಮಿಶ್ರಿತ ಮಾತುಗಳಲ್ಲಿಯೇ ಹೇಳುವುದಾದರೆ.... ಬಾಲಿ ದ್ವೀಪದಲ್ಲಿ ಒಂದು ಪುರಾತನ ಗಾದೆ ಮಾತಿದೆಯಂತೆ, 'ನಿಮ್ಮ ಮನಸ್ಸು ಮುದದಿಂದ ಇದ್ದರೆ ನೀವು ಯಾವಾಗ ಬೇಕಾದರೂ ನೃತ್ಯವನ್ನು ಕಲಿಯಬಹುದು'.

ಆದರೆ ಮನುಷ್ಯ ಮೂಲತಃ ಮುದದಿಂದ ಇಲ್ಲ. ವಾಸ್ತವವಾಗಿ ದುಃಖವೆಂಬುದು ಒಂದು ಅಪವಾದದಂತಿರಬೇಕು, ಪ್ರಸನ್ನತೆ, ಪ್ರಫುಲ್ಲತೆ ಆತನ ಸಹಜ ಧರ್ಮವಾಗಿರಬೇಕು. ಅವನು ಯಾರೊಂದಿಗೂ 'ಇದೇನು ನೀವಿಂದು ಬಹಳ ಸಂತೋಷದಿಂದ ಇರುವಂತೆ ಕಾಣುತ್ತಿದೆಯಲ್ಲ?' ಎಂದು ಕೇಳುವ ಅಗತ್ಯ ಬರಬಾರದು ?ಆದರೆ ವಸ್ತು ಸ್ಥಿತಿ ಹಾಗಿಲ್ಲ. ಒಂದು ವೇಳೆ ನೀವು ನಿಮ್ಮಲ್ಲೇ ಹರ್ಷಿತರಾಗಿದ್ದರೆ, ಮುಗುಳು ನಗುತ್ತ, ಸಂತೋಷದಿಂದ ಇರುವಂತೆ ಕಂಡು ಬಂದರೆ...ಜನರು ನಿಮ್ಮನ್ನು ದುರುಗುಟ್ಟಿ ನೋಡುವರು. ನಿಮ್ಮಿಂದೇನೋ ತಪ್ಪಾಗಿ ಹೋಯಿತೆಂಬಂತೆ, ಏನಾಯಿತು...ಈತನಿಗೆ? ಅದೇಕೆ ಹಾಗೆ ನಗುತ್ತಾನೆ ? ಬಹಳ ಖುಷಿಯಿಂದ ಇದ್ದಿರುವಂತಿದೆ, ಕಾರಣವೇನೋ ತಿಳಿಯದು'?. ಆಗ, ಜನ ಕೇಳಿಯೇ ಕೇಳುತ್ತಾರೆ 'ಏನು ಸಮಚಾರ? ಬಹಳ ಖುಷಿಯಾಗಿದ್ದರಲ್ಲ ಅಂತ! ಸ್ವಸ್ಥವಾಗಿ, ಸುಖಿಯಾಗಿರಲು, ಅದಕ್ಕೆ ಕಾರಣ ಬೇರೆ ಬೇಕು. ಆದರೆ ದುಃಖಿತನಾಗಿ ಇರುವವನನ್ನು ಕಂಡಾಗ ಜನ ಹಾಗೆ ಕೇಳಲಾರರು. ಅಷ್ಟೇ ಅಲ್ಲ ಒಂದು ನಿಮಿಷ ನಿಂತು ಅವನ ಕಡೆ ನೋಡುವುದೂ ಇಲ್ಲ. ಅನ್ಯ ಮನಸ್ಕರಂತೆ ಇರುವುದು ನಮ್ಮ ಸಹಜ ಸ್ವಭಾವವೇನೋ ಎಂಬಂತೆ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟು ಬಿಡುತ್ತಾರೆ. ನಾವು ನಗುವುದನ್ನೇ ಮರೆತಿದ್ದೇವೆ, ನಮ್ಮ ಮುಗುಳ್ನಗು ಕಳೆದು ಹೋಗಿದೆ.

ಪ್ರತಿಯೊಂದು ಮಗುವು ಹುಟ್ಟುವಾಗ ತರುವ ಆ ಅನನ್ಯ ನಗು ಮಾಯವಾಗಿದೆ. ತಾನು ಸ್ವಸ್ಥನಾಗಿರಬೇಕಿದ್ದ ಆ ದಾರಿ ಮರೆತು ಹೋಗಿದೆ. ನಾವು ನಿರಾಸೆಯಿಂದ ಮೃತ್ಯುವಿನ ಕಡೆಗೆ ಮುಖ ಮಾಡಿಕೊಳ್ಳುವ ಸಂಕಲ್ಪ ಮಾಡಿರುತ್ತೇವೆ. ಏಕೆಂದರೆ ಹೀಗೆ ಮಾಡುವುದು ಅವರಿಗೆ ಬೇಕಿತ್ತು. ಅವರಿಗೆ ಇದರಿಂದ ಹಿತ. ಯಾವಾಗಲೂ ಜೋಲು ಮೋರೆಯಲ್ಲೇ ಇರುತ್ತೇವೆ. ವಿಧಾನ...ಕಾರ್ಯಗಳಲ್ಲಿ ನಮ್ಮ ವಾಸ್ತವಿಕ ರೂಪ ಒಂದು ನಕಲಿ ಮುಖವಾಡವನ್ನು ಧರಿಸಿರುತ್ತೇವೆ. ಸಮಾಜ ಕೂಡ ಅದನ್ನೇ ಅಪೇಕ್ಷಿಸುತ್ತದೆ. ನಾವು ಅತ್ಯಾನಂದದಿಂದ ರಸ್ತೆಯಲ್ಲಿ ಕುಣಿದಾಡುವುದನ್ನು ಯಾರೂ ಸಹಿಸಲಾರರು. ನೀವು ಹೃದಯ ತುಂಬಿ ನಗುವುದು ಯಾರಿಗೂ ಸಹಿಸದು. ಅಟ್ಟಹಾಸದಿಂದ ಗಹಗಹಿಸಿ ನಗುವುದನ್ನು ಯಾರೂ ಸೈರಿಸಲಾರರು. ನಿಮ್ಮ ಮನೆಯಲ್ಲೇ ನೀವು ಅಟ್ಟಹಾಸಗೈದರೂ ನೆರೆಹೊರೆಯವರು ಬಂದು ಬಾಗಿಲು ಬಡಿದು- ಇದೇನಿದು ಕೋಲಾಹಲ? ದಯವಿಟ್ಟು ನಿಲ್ಲಿಸಿ ನಾವೇನು ಇರಬೇಕೋ ಇಲ್ಲಾ ಮನೆಬಿಟ್ಟು ಹೋಗಬೇಕೋ..ನಿಮ್ಮ ಸಂಭ್ರಮದಲ್ಲಿ ನಮಗೆ ಮನೆಯಲ್ಲಿರಲು ಆಗುತ್ತಿಲ್ಲ' ಎಂದು ಆಕ್ಷೇಪಿಸುವರು.
ನೀವು ಜೋಲು ಮುಖದಿಂದ ಇದ್ದರೆ ಅವರಿಗೆ ಅಡ್ಡಿಯಿಲ್ಲ. ಜೋಲು ಮುಖದಿಂದ ಇರುವವರಿಗೆ ಜೋಲು ಮುಖದವರು ತುಂಬಾ ಇಷ್ಟ. ನಗುವವರನ್ನು ಕಂಡರೆ ಅವರಿಗೆ ಸಂಕಟವಾಗುತ್ತೆ. ಸಾಕ್ರೆಟೀಸ್‌ನಂತಹ ವ್ಯಕ್ತಿಗಳಿಗಿದ್ದ ತೊಂದರೆಯೇ ಇದು. ಅವರು ಅತ್ಯಂತ ಆನಂದದಿಂದ ಇರುವರು. ಮತ್ತು ಜನರಲ್ಲಿ ಎಚ್ಚರಿಕೆ ಮೂಡಿಸುತ್ತಿದ್ದರು. ಅವರ ಆನಂದ, ಎಚ್ಚರಿಕೆಯ ನಡೆ-ನುಡಿ ಕಂಡು ಜೋಲು ಮೋರೆಯವರ ಹೊಟ್ಟೆಯಲ್ಲಿ ಹಾಲಾಹಲ ಕಲಸಿದಂತಾಗುತ್ತಿತ್ತು. ಅವರ ಗುಂಪು, ಕೇಕೆ ಹಾಕುವವರನ್ನು ಸೈರಿಸಲಾಗದೆ. ಅವರನ್ನು ಕೊನೆಗಾಣಿಸಲೇಬೇಕಾಯಿತು!. ಏಕೆಂದರೆ ನಿಮ್ಮ ಮನದಲ್ಲಿ ಬಂಡಾಯದ ಸುಂಕನ್ನು ಹರಡುವರು, ನಾವೋ ಬಂಡಾಯವೆಂದರೆ ಹೆದರಿ ಸಾಯುವವರು! ಒಮ್ಮೆಯಾದರೂ ಒಬ್ಬ ವ್ಯಕ್ತಿ ವಿದ್ರೋಹದ ಪ್ರೇಮದಲ್ಲಿ ಬೀಳಬೇಕು. ಆಗ ಮಾತ್ರ ಅವನು ಸರಿಯಾದ ದಾರಿಗೆ ಬರಬಲ್ಲ.

ರಷ್ಯಾದ ಪುರಾತನ ಕಥೆಯೊಂದಿದೆ..ಚೇಮ್ ನಗರದ ಮಂದಿ ಯಾವಾಗಲೂ ಚಿಂತಾಕ್ರಾಂತರಾಗಿಯೇ ಇರುವವರಂತೆ. ಅವರಿಗೆ ಅದೇ ಅಭ್ಯಾಸ, ಅಷ್ಟೇ ಅಲ್ಲ ತಾವೇಕೆ ಇಷ್ಟು ಚಿಂತಿತರಾಗಿದ್ದೇವೆ ಎಂಬುದೇ ಅವರಿಗೆ ದೊಡ್ಡ ಚಿಂತೆಯಾಗಿತ್ತಂತೆ!. ಆಗ ನಗರದ ಅಧ್ಯಕ್ಷರಾಗಿದ್ದವರು ಚರ್ಚೆ ನಡೆಸಿ, ಕೊನೆಗೆ ಐರಾ ಎಂಬೊಬ್ಬ ತೀರ ಕಡುಬಡವನೊಬ್ಬನನ್ನು ಕರೆತಂದು ಅವನನ್ನು ಕೆಲಸಕ್ಕೆ ನೇಮಿಸಿಕೊಳ್ಳಲಾಯಿತಂತೆ. ಆತನಿಗೆ ಕೆಲಸ ಏನಪ್ಪಾ ಅಂದ್ರೆ...ಚೇಮ್ ನಗರ ವಾಸಿಗಳೆಲ್ಲರ ಪರವಾಗಿ ಆತನೊಬ್ಬನೇ ದಿನವಿಡೀ ಚಿಂತಿಸುವುದು...ಅದಕ್ಕೆ ಆತನಿಗೆ ವಾರಕ್ಕೆ 4ರೂಬಲ್ ಸಂಬಳ ಅಂತಲೂ ಘೋಷಿಸಲಾಯಿತು. ಆದರೆ ಈ ಯೋಜನೆ ತಲೆಕೆಳಗಾಯಿತು...!ಇಷ್ಟು ಕೇಳಿದ್ದೇ ತಡ ಐರಾನ ಸಂತೋಷಕ್ಕೆ ಪಾರವೇ ಇಲ್ಲ, ಆತ ತನ್ನ ಹುಟ್ಟೂರಾದ ರೂಥ್‌ಗೆ ಬಂದು ಬೀದಿ, ಬೀದಿ, ನೆಂಟರು, ನೆರೆಕೆರೆಯವರಿಗೆಲ್ಲ ತನಗೆ ಕೆಲಸ ಸಿಕ್ಕಿದ ಬಗ್ಗೆ ಖುಷಿಯಿಂದ ಹೇಳಿಕೊಂಡ. ಕೊನೆಗೆ ಅವನ ಬಾಯಿಂದ ಬಂದ ಮಾತೆಂದರೆ, 'ಇನ್ನು ನನಗೆ ಚಿಂತೆ ಇಲ್ಲ..ವಾರಕ್ಕೆ 4 ರೂಬಲ್ ಸಂಬಳ ಬರುತ್ತೆ'. ಆದರೆ ಆತನಿಗೆ ಕೊಟ್ಟ ಕೆಲಸ ಚಿಂತಿಸುವುದು...ಅದನ್ನೇ ಮರೆತು ಬಿಟ್ಟ!. ಈ ವಿಷಯ ಅಧ್ಯಕ್ಷರಿಗೆ ತಿಳಿಯುತ್ತಿದ್ದಂತೆಯೇ ಆತ ಕೆಲಸ ಕಳೆದುಕೊಂಡ!! ಅದೇ ರೀತಿ ನಮ್ಮ ಸ್ವಭಾವ ಕೂಡ...

Thursday, June 4, 2009

ತಮಿಳುನಾಡಿನಲ್ಲಿ ರಕ್ತಪಾತ ಆಗಲೇ ಇಲ್ಲಾ...!!

ರಾಜಪಕ್ಷೀಯಗಳು ಚುನಾವಣೆ ಸಂದರ್ಭದಲ್ಲಿ ತಮ್ಮ ಅನುಕೂಲ ಶಾಸ್ತ್ರಕ್ಕೆ ತಕ್ಕಂತೆ ಅವಕಾಶವನ್ನು ಹೇಗೆ ಬಳಸಿಕೊಳ್ಳುತ್ತಾರೆಂಬುದಕ್ಕೆ ತಮಿಳುನಾಡಿನಲ್ಲಿ ನಡೆದ ರಾಜಕೀಯ ಪ್ರಹಸನವೇ ಸಾಕ್ಷಿ. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಅಂಡು ಸುಟ್ಟ ಬೆಕ್ಕಿನಂತಿದ್ದ ತಮಿಳುನಾಡಿನ ಪಕ್ಷಗಳು ನಂತರ ಮಾತ್ರ ಎಲ್‌ಟಿಟಿಇ ವಿಷಯದಲ್ಲಿ ಅವುಗಳು ನಡೆದುಕೊಂಡು ರೀತಿ ಮಾತ್ರ ಅಚ್ಚರಿ ಹುಟ್ಟಿಸುವಂಥದ್ದು. ಕಟ್ಟರ್ ಎಲ್‌ಟಿಟಿಇ ವಿರೋಧಿಯಾಗಿದ್ದ ಎಐಎಡಿಎಂಕೆ ವರಿಷ್ಠೆ ಜಯಲಲಿತಾ ಕೂಡ, ಶ್ರೀಲಂಕಾದಲ್ಲಿ ಪ್ರತ್ಯೇಕ ತಮಿಳು ರಾಜ್ಯ ಮಾತ್ರ ಏಕೈಕ ಪರಿಹಾರ ಮಾರ್ಗ ಎಂದು ಹೇಳಿಕೆ ನೀಡಿದರು. ಅದರ ಬೆನ್ನಲ್ಲೇ ಮತ್ತೊಂದು ಪ್ರಾದೇಶಿಕ ಪಕ್ಷವಾದ ಪಾಟಾಳ್ ಮಕ್ಕಳ್ ಕಚ್ಚಿ (ಪಿಎಂಕೆ)  ಸಹ ಪ್ರತ್ಯೇಕ ರಾಜ್ಯ ಹೇಳಿಕೆಗೆ ಬೆಂಬಲ ಸೂಚಿಸಿತು.

ಆದರೆ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಆಡಳಿತಾರೂಢ ಡಿಎಂಕೆಯ 'ಪೆರಿಯಾರ್' ಎಂ.ಕರುಣಾನಿಧಿಯವರು ಶ್ರೀಲಂಕಾದಲ್ಲಿ ಕದನ ವಿರಾಮ ಘೋಷಿಸುವಂತೆ ಲಂಕಾ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ತಮಿಳುನಾಡು ಬಂದ್‌ಗೆ ಕರೆ ನೀಡಿದರು. ನಂತರ ತರಾತುರಿಯಲ್ಲಿ ಗೋಪಾಲಪುರಂನ ಮನೆಯಲ್ಲಿ ಬೆಳ್ಳಂಬೆಳಗ್ಗೆ ನಾಲ್ಕಾರು ಎಸಿಯ ತಣ್ಣನೆಯ ಗಾಳಿಯ ನಡುವೆ ಉಪವಾಸ ಸತ್ಯಾಗ್ರಹಕ್ಕೆ ಕೂತರು. ಅದು ಕಾಕತಾಳಿಯ ಎಂಬಂತೆ ಲಂಕಾ ಸರ್ಕಾರ ಕದನವಿರಾಮ ಘೋಷಿಸಿರುವುದಾಗಿ ಹೇಳಿಕೆ ನೀಡಿರುವುದರಿಂದ 1 ಗಂಟೆಗೆ ಉಪವಾಸ ಮುಗಿಸಿ, ತನ್ನ ಸತ್ಯಾಗ್ರಹಕ್ಕೆ ಸಂದ ಜಯ ಅಂತ ಬೀಗಿದರು.

ಅವೆಲ್ಲಕ್ಕಿಂತ ಹೆಚ್ಚಾಗಿ ಫಯರ್ ಬ್ರ್ಯಾಂಡ್ ಎಂದೇ ಬಿರುದಾಂಕಿತರಾಗಿರುವ ಎಂಡಿಎಂಕೆಯ ಮುಖ್ಯಸ್ಥ ವೈಕೋ, ಬಹಿರಂಗಸಭೆಯಲ್ಲಿ ಮಾತನಾಡುತ್ತ, ಎಲ್‌ಟಿಟಿಇ ವರಿಷ್ಠ ವೇಲುಪಿಳ್ಳೈ ಪ್ರಭಾಕರನ್‌ಗೆ ಏನೇ ಅಪಾಯವಾದರು ಕೂಡ ತಮಿಳುನಾಡು ಹೊತ್ತಿ ಉರಿಯುತ್ತೆ ಎಂದು ಎಚ್ಚರಿಕೆ ನೀಡಿದ್ದರು. ಅದಕ್ಕೆ ತಮಿಳುರಾಷ್ಟ್ರೀಯ ಚಳವಳಿ ಹೋರಾಟಗಾರ ಪಿ.ನೆಡುಮಾರನ್ ಕೂಡ ಸಾಥ್ ನೀಡಿದ್ದರು. 

ಆದರೆ ಪ್ರಭಾಕರನ್ ಸಾವಿನ ಸುದ್ದಿ ಟಿವಿ ಚಾನೆಲ್‌ಗಳಲ್ಲಿ ಬಿತ್ತರವಾಗುತ್ತಿದ್ದರೆ. ಚೆನ್ನೈನಲ್ಲಿದ್ದ ನಾವು ಮಧ್ನಾಹ್ನದ ಊಟಕ್ಕೂ ತತ್ವಾರ ಆಗಬಹುದು ಅಂತ ಹೆದರಿ ಕಂಗಾಲಾಗಿ ಅಂದು ಬೇಗ ಊಟಕ್ಕೆ ಹೋಗಿದ್ದೇವು. ಆದರೆ ಸಮೀಪದ ಐಸ್‌ಹೌಸ್ ಬಳಿ ಸ್ವಲ್ಪ ಗಲಾಟೆ ಆಗಿತ್ತು ಬಿಟ್ಟರೆ ಬೇರೇನೂ ಆಗಿರಲಿಲ್ಲವಾಗಿತ್ತು. ನಂತರ ಪ್ರಭಾಕರನ್ ಸಾವಿನ ಸುದ್ದಿಯನ್ನು ಶ್ರೀಲಂಕಾ ಸರ್ಕಾರ ಅಧಿಕೃತವಾಗಿ ಘೋಷಿದಾಗಲಂತೂ ನಾವೆಲ್ಲ ಗಾಬರಿಯಾಗಿ ಹೋಗಿದ್ದೇವು. ಆದರೆ ವೈಕೋ ಹೇಳಿಕೆಯ ರಕ್ತಪಾತವಾಗಲಿ, ಪುಟ್ಟ ಗಲಭೆಯೂ ನಡೆದಿರಲಿಲ್ಲ. ಆದರೆ ಕೆಲವು ಚಾನೆಲ್‌ಗಳಲ್ಲಿ ತಮಿಳುನಾಡು ಉದ್ವಿಗ್ನ ಅಂತ ಬ್ರೇಕಿಂಗ್ ನ್ಯೂಸ್ ಕೊಡುತ್ತಿದ್ದರೆ ಚೆನ್ನೈನಲ್ಲಿ ಸುದ್ದಿ ನೋಡುತ್ತಿದ್ದ ನಮಗೆ ನಗು ಬರುತ್ತಿತ್ತು. ಆದರೆ ಕಡಲೂರು ಸೇರಿದಂತೆ ಕೆಲವು ಕಡೆ ಸ್ವಲ್ಪ ಮಟ್ಟಿನ ಹಿಂಸಾಚಾರ ನಡೆದಿತ್ತು. ಅದನ್ನು ಹೊರತುಪಡಿಸಿದರೆ. ಎಲ್‌ಟಿಟಿಇ ಪ್ರಭಾಕರನ್ ಸಾವನ್ನಪ್ಪಿದರೆ ತಮಿಳುನಾಡು ಹೊತ್ತು ಉರಿಯುತ್ತೆ ಎಂಬ ರಾಜಕೀಯ ನಾಯಕರ ಹೇಳಿಕೆಯ ಹಿಂದಿನ ಸಂಚನ್ನು ಗಮನಿಸಬೇಕಾಗಿದೆ. 

ಯಾಕೆಂದರೆ ಚುನಾವಣೆ ನಡೆಯುವ ಮೊದಲು ಏನಾದ್ರು ಎಲ್‌ಟಿಟಿಇ ನಾಯಕ ಪ್ರಭಾಕರನ್ ಹತ್ಯೆಯಾಗಿದ್ದರೆ, ನಿಜಕ್ಕೂ ತಮಿಳುನಾಡು ಹೊತ್ತಿ ಉರಿಯುತ್ತಿತ್ತು ಎಂಬುದರಲ್ಲಿ ಯಾವುದೇ ಸಂಶಯವಿರಲಿಲ್ಲ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯಾವುದಾದರೊಂದು ಇಶ್ಯೂ ಬೇಕಾಗುವುದು ಖದೀಮ ರಾಜಕಾರಣಿಗಳಿಗೆ ಮಾತ್ರ. ಲಂಕಾದಲ್ಲಿ ಕದನ ವಿರಾಮ ನಿಲ್ಲಿಸುವಂತೆ ಬಂದ್‌ಗೆ ಕರೆ ನೀಡಿದ ಡಿಎಂಕೆ ಆಗಲಿ, ಪ್ರತ್ಯೇಕ ರಾಜ್ಯಬೇಕು ತಮಿಳರಿಗೆ ಅಂತ ಬೊಬ್ಬಿರಿದ ಎಐಎಡಿಎಂಕೆ ಆಗಲಿ, ವೈಕೋ, ನೆಡುಮಾರನ್ ಯಾರೂ ಕೂಡ ಸೊಲ್ಲೆ ಎತ್ತಿಲ್ಲ. ವೈಕೋ, ನೆಡುಮಾರನ್ ಮಾತ್ರ ಈಗಲೂ ಪ್ರಭಾಕರನ್ ಬದುಕಿಯೇ ಇದ್ದಾನೆ ಅಂತ ಲಬೋ, ಲಬೋ ಅಂತಿದ್ದಾರೆ. 

ಕಳೆದ ಶನಿವಾರದ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಕಾರ್ಯನಿರ್ವಾಹಕ ಸಂಪಾದಕ ಸುದರ್ಶನ್ ಅವರೊಂದಿಗೆ ಕಿಲ್ಲಿ ಎಂಬಾತನೊಂದಿಗೆ ನಡೆಸಿದ ಸಂದರ್ಶನದಲ್ಲಿ, ಎಲ್‌ಟಿಟಿಇಯ ವರಿಷ್ಠ ಪ್ರಭಾಕರನ್‌ಗೆ ವೈಕೋ ಮತ್ತು ನೆಡುಮಾರನ್‌ಗಿಂತ ದೊಡ್ಡ ಶತ್ರುವಿನ ಅಗತ್ಯವಿರಲಿಲ್ಲ ಅಂತ ಹೇಳಿದ್ದರು. ಅಲ್ಲದೇ ಎಲ್‌ಟಿಟಿಇಗೆ ಏನಾದ್ರೂ ಆದರೆ ತಮಿಳುನಾಡು ಹೊತ್ತಿ ಉರಿಯುತ್ತೆ, ಡಿಎಂಕೆ ನೆಲಕಚ್ಚುತ್ತೆ ಅಂತೆಲ್ಲಾ ಪ್ರಭಾಕರನ್ ಹಾಗೂ ನಟೇಶನ್‌ಗೆ ಸುಳ್ಳು ಮಾಹಿತಿ ನೀಡುವ ಮೂಲಕ ದಾರಿ ತಪ್ಪಿಸುತ್ತಿದ್ದ ಪ್ರಮುಖ ರೂವಾರಿಗಳೇ ಅವರಿಬ್ಬರು ಅಂತ ಆರೋಪಿಸಿದ್ದರು. 

ನಿಜಕ್ಕೂ ತಮಿಳುನಾಡಿನ ರಾಜಕೀಯ ಪಕ್ಷಗಳು ಶ್ರೀಲಂಕಾದಲ್ಲಿನ ತಮಿಳರ ರಕ್ಷಣೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂಬುದು ಅಕ್ಷರಶ ಸತ್ಯ. ಶ್ರೀಲಂಕಾದಲ್ಲಿನ ತಮಿಳರು ಅತ್ತ ಎಲ್‌ಟಿಟಿಇ ಹಾಗೂ ಲಂಕಾ ಸರ್ಕಾರ ಎರಡರಿಂದಲೂ ಅನ್ಯಾಯಕ್ಕೊಳಗಿದ್ದರು. ಅವರ ಬಗ್ಗೆ ಧ್ವನಿ ಎತ್ತಬೇಕಾಗಿದ್ದ ತಮಿಳುನಾಡಿನ ರಾಜಕೀಯ ಪಕ್ಷಗಳು ಮಾತ್ರ ರಾಜಕೀಯ ಬೇಳೆ ಬೇಯಿಸಿಕೊಂಡು, ಪ್ರಭಾಕರನ್‌ನನ್ನು ಹೀರೋವನ್ನಾಗಿ ಬಿಂಬಿಸಲು ಹೊರಟರೆ ವಿನಃ ಬೇರೇನೂ ಮಾಡಿಲ್ಲ ಎಂಬುದಕ್ಕೆ ಲಂಕಾದಲ್ಲಿನ ತಮಿಳರ ಸ್ಥಿತಿಗತಿಯೇ ಅದಕ್ಕೆ ಸಾಕ್ಷಿ. 

ರಾಜಕೀಯ ಮುಖಂಡರು,ಪಕ್ಷಗಳು ಸಂದರ್ಭಕ್ಕೆ ತಕ್ಕಂತೆ ಹೇಗೆ ನಡೆದುಕೊಳ್ಳುತ್ತಾರೆ ಎಂಬುದಕ್ಕೆ ತಮಿಳುನಾಡಿನ ರಾಜಕೀಯ ಪಕ್ಷ, ಮುಖಂಡರು ಇತ್ತೀಚಿಗಿನ ಜ್ವಲಂತ ಸಾಕ್ಷಿ. ಇದು ರಾಮಜನ್ಮಭೂಮಿ, ಸಿಖ್ ಹತ್ಯಾಕಾಂಡ, ಗೋದ್ರಾ ಹತ್ಯಾಕಾಂಡ, ನಂದಿಗ್ರಾಮ ಹಿಂಸಾರ, ಕೋಮುಗಲಭೆ ಇವೆಲ್ಲದರ ಹಿಂದೆ ಸೂಕ್ಷ್ಮವಾಗಿ ಗಮನಿಸಿ ರಾಜಕೀಯ ಢಾಳಾಗಿ ಕಾಣಿಸುತ್ತೆ....

Tuesday, January 27, 2009

ಶ್ರೀರಾಮಸೇನೆಯ 'ತಾಲಿಬಾನ್' ಸಂಸ್ಕೃತಿ...

ಮಂಗಳೂರಿನ ಎಮ್ನೇಶಿಯ ಪಬ್‌‌ನಲ್ಲಿ ಅಶ್ಲೀಲ ನರ್ತನ ಮಾಡುತ್ತಿದ್ದರು, ಅನೈತಿಕ ಚಟುವಟಿಕೆ ನಡೆಸುತ್ತಿದ್ದರು, ಇದು ದೇಶದ ಸಂಸ್ಕೃತಿಗೆ ಆದ ಅಪಚಾರ ಎಂದು ಆರೋಪಿಸಿ ಶ್ರೀರಾಮಸೇನೆಯ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ಇದೀಗ ದೇಶವ್ಯಾಪಿ ಚರ್ಚೆಗೆ ಒಳಗಾಗಿದೆ. ಹೌದು, ಪಬ್‌ನಲ್ಲಿ ನರ್ತನ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ್ದು ಸರಿ ಎಂಬುದು ಹಲವರ ವಾದವಾದರೆ, ದೇಶದ ಸಂಸ್ಕೃತಿ ರಕ್ಷಣೆಯ ಹೆಸರಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳಲು ಅವರಿಗೆ ಅಧಿಕಾರ ಕೊಟ್ಟವರಾರು ಎಂದೂ ಮಹಿಳಾ ಸಂಘಟನೆಗಳು ಕಟುವಾಗಿ ಪ್ರಶ್ನಿಸಿವೆ. ಇದು ತಾಲಿಬಾನ್ ಸಂಸ್ಕೃತಿಯ ಪ್ರತಿರೂಪ ಎಂದು ಕೇಂದ್ರ ಸಚಿವ ರೇಣುಕ ಚೌಧುರಿ ಗಂಭೀರವಾಗಿ ಆರೋಪಿಸಿದ್ದಾರೆ.

ಪಬ್‌ನಲ್ಲಿ ಅಶ್ಲೀಲವಾಗಿ ನರ್ತಿಸುತ್ತಿದ್ದರು, ಇದರಿಂದ ನಮ್ಮ ಸಂಸ್ಕೃತಿಗೆ ಧಕ್ಕೆ ಬರುತ್ತದೆ. ಈ ರೀತಿ ಮಾಡುವುದರಿಂದ ಯುವ ಪೀಳಿಗೆಗೆ ಎಚ್ಚರಿಕೆಯ ಸಂದೇಶ ಹೋಗುತ್ತದೆ. ಮತ್ತು ಇಂತಹ ಹೋರಾಟವನ್ನು ಮುಂದುವರಿಸುವುದಾಗಿಯೂ ಸೇನೆಯ 'ದಂಡಾಧಿಕಾರಿ' ಪ್ರಮೋದ್ ಮುತಾಲಿಕ್ ಸ್ಪಷ್ಟನೆಯನ್ನೂ ನೀಡಿದ್ದಾರೆ. ನಿಜಕ್ಕೂ ಪಬ್ ಮೇಲೆ ದಾಳಿ ಮಾಡುವುದರಿಂದ ಸಂಸ್ಕೃತಿಯ ರಕ್ಷಣೆ ಸಾಧ್ಯವೆ?ಅಲ್ಲಿ ಅರೆಬೆತ್ತಲೆ ನರ್ತನ ಮಾಡುತ್ತಿದ್ದರು ಇದರಿಂದ ನಮ್ಮ ಸಂಸ್ಕೃತಿಯೇ ಎಕ್ಕುಟ್ಟಿ ಹೋಗುತ್ತಿದೆ ಅಂತ ಲಬೋ, ಲಬೋ ಅಂತ ಬಡಿದುಕೊಳ್ಳುವುದರಲ್ಲಿ ಅರ್ಥವಿದೆಯಾ ?

ಮಂಗಳೂರಿನ ಪಬ್‌ನಲ್ಲಿ ಅರೆಬೆತ್ತಲೆ ನರ್ತನ ಮಾಡುತ್ತಿರುವುದರಿಂದ ಸಂಸ್ಕೃತಿ ಹಾಳಾಗುತ್ತದೆ ಎಂದು ಬೊಬ್ಬೆ ಹೊಡೆಯುತ್ತಿರುವ ಶ್ರೀರಾಮಸೇನೆ (ಇದನ್ನು ಸಂಘ-ಪರಿವಾರ ಕೂಡ ಅದನ್ನೇ ಮಾಡಿದೆ, ಈಗ ಬಿಜೆಪಿಯಿಂದ ಮುನಿಸಿಕೊಂಡು ಶ್ರೀರಾಮಸೇನೆ ಕಟ್ಟಿರುವ ಮುತಾಲಿಕ್ ಮೇಲೆ ಅಸಮಾಧಾನ ಇರುವುದರಿಂದಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಯವರು ಗಟ್ಟಿಧ್ವನಿಯಲ್ಲಿ ಹೇಳಿದ್ದಾರೆ. ಅದೇ ಬಿಜೆಪಿ ಅಂಗಸಂಸ್ಥೆಗಳು ಮಾಡಿದ್ದರೆ ಅಂತಹ ಕ್ರಮಕ್ಕೆ ಶೀಘ್ರವೇ ಮುಂದಾಗುತ್ತಿದ್ದರೆ ಎಂಬುದು ಬೇರೆ ಪ್ರಶ್ನೆ. ಚರ್ಚ್ ದಾಳಿ ಪ್ರಕರಣದಲ್ಲಿ ಬಜರಂಗದಳದ ಮಹೇಂದ್ರ ಕುಮಾರ್ ಮಾಧ್ಯಮದಲ್ಲಿ ಘಟನೆಯ ಹೊಣೆ ಹೊತ್ತುಕೊಂಡು ಹೇಳಿಕೆ ನೀಡಿದ್ದರಿಂದ ಅವರು ತಲೆದಂಡ ಕೊಡಬೇಕಾಯಿತು ಅಷ್ಟೇ.)

ಇಂದು ಹಿಂದಿ, ತಮಿಳು, ಕನ್ನಡ ಸಿನಿಮಾಗಳಲ್ಲಿ ತೋರಿಸುವ ಅರೆನಗ್ನ ದೃಶ್ಯಗಳನ್ನು ನೋಡಿ ಯುವ ಪೀಳಿಗೆ ಹಳ್ಳಹಿಡಿದು ಹೋಗುವುದಿಲ್ಲವಾ?ಪ್ರತಿ ತಾಲೂಕುಗಳಲ್ಲಿ 'ಎ' (ಹೆಚ್ಚಾಗಿ ಮಲಯಾಳಂ ಭಾಷೆಯ) ಸಿನಿಮಾಗಳು ಪ್ರದರ್ಶನಗೊಳ್ಳುತ್ತದೆ, ಅಲ್ಲೆಲ್ಲ ಸಾಲು,ಸಾಲಾಗಿ ನಿಂತು ಸಿನಿಮಾ ನೋಡಿ ಬರುತ್ತಾರಲ್ಲ, ಅದರಿಂದ ಸಂಸ್ಕೃತಿಗೆ ಧಕ್ಕೆ ಬರುವುದಿಲ್ಲವಾ? ಹೋಗಲಿ ಹಿಂದಿ, ಇಂಗ್ಲಿಷ್ ಕೆಲವು ಸಿನಿಮಾಗಳಲ್ಲಿ ಮೈಮೇಲೆ ಬಟ್ಟೆ ಎಲ್ಲಿದೆ ಎಂದು ಹುಡುಕಬೇಕಾಗುತ್ತೆ.... ಅದನ್ನು ಬಾಯಿ ಚಪ್ಪರಿಸಿಕೊಂಡು, ಸಿಳ್ಳೆ ಹಾಕಿ ನೋಡುವ ನಾವು ಅದರಿಂದ ಸಂಸ್ಕೃತಿಗೆ ಅಪಚಾರ ಅಗುವುದಿಲ್ಲವಾ? ಇವತ್ತು ಸೈಬರ್ ಸೆಂಟರ್‌ಗಳಲ್ಲಿ ನಡೆಯುತ್ತಿರುವ ಸೈಬರ್ ಸೆಕ್ಸ್ ಬಗ್ಗೆ ನೀವ್ಯಾಕೆ ಸುಮ್ಮನಿದ್ದೀರಿ ಸೇನೆಯವರೇ ? ಪಬ್‌ಗೆ ಹೋಗುವುದರಿಂದ, ಅವರನ್ನು ನೋಡುವುದರಿಂದ ಉಳಿದವರು ಹಾಳಾಗುತ್ತಾರೆಂಬ ಧೋರಣೆ ಇದೆಯಲ್ಲ ಅದೇ ದೊಡ್ಡ ವಿಪರ್ಯಾಸದ್ದು. ನಾವು ನೆಟ್ಟಗಿದ್ದರೆ ಅದ್ಯಾಕೆ ಹಾಗಾಗುತ್ತೆ, ಹೋಗಲಿ ಒಬ್ಬರನ್ನು ನೋಡಿ ಹಾಳಾಗುವುದು, ಹೇಳಿದ್ದನ್ನು ಕೇಳಿ ಹಾಳಾಗುವುದು,ಒಳ್ಳೆಯದಾಗುವುದು ಅಂತ ಆದರೆ... ರಾಮಾಯಣ, ಮಹಾಭಾರತ ಸಿರಿಯಲ್ ನೋಡಿ ಅದೆಷ್ಟು ಮಂದಿ ಶ್ರೀರಾಮ, ಧರ್ಮರಾಯ ಆಗಬೇಕಿತ್ತು. ಯಾರು ಆಗಿಲ್ವಲ್ಲಾ.

ಧರ್ಮದ ರಕ್ಷಣೆ, ಸಂಸ್ಕೃತಿಯ ರಕ್ಷಣೆ ಮಾಡಲು ಶ್ರೀರಾಮಸೇನೆಗೆ ಗುತ್ತಿಗೆ ನೀಡಿದ್ದಾರಾ? ಹೋಗಲಿ ಸಾಹಿತ್ಯಗಳಲ್ಲಿ ಎಷ್ಟು ಅಶ್ಲೀಲ ಇಲ್ಲ, ಅವೆಲ್ಲ ಓದಿದವನು ಹಾಳಾಗಬೇಕಲ್ಲ....ಹಾಗಾದರೆ ತಾಲಿಬಾನ್ ಹುಡುಗಿಯರಿಗೆ ಶಾಲೆಗೆ ಹೋಗಬೇಡಿ, ಪುರುಷರು ಗಡ್ಡ ಬೋಳಿಸಿಕೊಳ್ಳಬೇಡಿ ಎಚ್ಚರ ಎಂದು ಫರ್ಮಾನು ಹೊರಡಿಸುತ್ತೆ....ಅದು ಮಾಡುವುದು ಸಂಸ್ಕೃತಿ ಮತ್ತು ಧರ್ಮದ ಹೆಸರಲ್ಲಿ. ನೀವು ಕೂಡ ಅದನ್ನೇ ಮಾಡುತ್ತೀರಲ್ಲ ಏನಾದರು ವ್ಯತ್ಯಾಸ ಇದೆ ಅನ್ನಿಸುತ್ತಾ ?ನೀವು ಧರ್ಮದ ರಕ್ಷಣೆ....ಸಂಸ್ಕೃತಿ ರಕ್ಷಣೆ ಹೆಸರಲ್ಲಿ ಮಾಡುತ್ತೀರಿ ಎಂದು ಸಮರ್ಥನೆ ನೀಡುತ್ತೀರಿ ಎಂದಾದರೆ...ತಾಲಿಬಾನಿಗಳು ಅದನ್ನೇ ಹೇಳುತ್ತಾರಲ್ಲ. ಅವರ ದೃಷ್ಟಿಯಲ್ಲಿ ಅದು ಪವಿತ್ರ ಕೆಲಸ !! ಪಬ್ ಸಂಸ್ಕೃತಿಯಿಂದ ಯುವ ಪೀಳಿಗೆ ಕೆಟ್ಟ ಹಾದಿ ಹಿಡಿಯುತ್ತೆ, ಅದನ್ನು ನಾವು ನಿಲ್ಲಿಸುತ್ತೇವೆ ಸಂಸ್ಕೃತಿಯನ್ನು ರಕ್ಷಿಸುತ್ತೇವೆ ಎಂಬ ವಾದ ಇದೆಯಲ್ಲ.... ಸಿನಿಮಾದಲ್ಲಿ ಹೀರೋ ನೂರು ಜನರನ್ನು ಹೊಡೆದು ಸಮಾಜದ ಉದ್ದಾರಕ್ಕೆ ಹೊರಟ ಹಾಗೇ...ಅಷ್ಟೇ ಬಾಲಿಶವಾದದ್ದು......

ಬೆಳಗಾವಿ ಅಧಿವೇಶನದ ವಿಪರ್ಯಾಸ....

ಬೆಳಗಾವಿಯಲ್ಲಿ ನಡೆದ ಎರಡನೇ ಬಾರಿಯ ಐತಿಹಾಸಿಕ ಅಧಿವೇಶನ ಮುಕ್ತಾಯ ಕಂಡಿದೆ. ಆದರೆ ಉತ್ತರಕರ್ನಾಟಕ ಅಭಿವೃದ್ದಿಯ ಕೂಗು, ಗಡಿ ಸಮಸ್ಯೆಯಂತಹ ಗಂಭೀರ ಸಮಸ್ಯೆಗಳ ಚರ್ಚೆಗಿಂತ ಅಧಿಕವಾಗಿ ಅಕ್ರಮ ಗಣಿಗಾರಿಕೆ ಅನುರಣಿಸುವ ಮೂಲಕ ಯಾಕಾಗಿ ಈ ಅಧಿವೇಶನ....ಅಧಿವೇನದಲ್ಲಿನ ಹೆಚ್ಚಿನ ಸಮಯ ಹಾಳಾಗುವಂತಾಗಿದೆ. ಅವೆಲ್ಲಕ್ಕಿಂತ ಮುಖ್ಯವಾಗಿ ಪ್ರತಿಪಕ್ಷ ಮತ್ತು ಆಡಳಿತಾರೂಢ ಪಕ್ಷಗಳು ನಡೆದುಕೊಂಡ ರೀತಿ ಮಾತ್ರ ನಾಚಿಕೆ ಹುಟ್ಟಿಸುವಂತಾಗಿದ್ದು ಮಾತ್ರ ವಿಪರ್ಯಾಸ. ಅಧಿವೇಶನದ ಆರಂಭವಾದ (ಜ.16) ದಿನದಿಂದ ಆರಂಭಿಸಿ ಸೋಮವಾರದವರೆಗೂ ಸದನದಲ್ಲಿ ಗಂಭೀರ ಚರ್ಚೆಗಳೇ ನಡೆಯಲಿಲ್ಲ. ಅಧಿವೇಶನದ ಕೊನೆಯ ಎರಡು ದಿನಗಳಲ್ಲಿ ಗಣಿ ಚರ್ಚೆಗೆ ವಿದಾಯ ಹೇಳಿ, ಉತ್ತರ ಕರ್ನಾಟಕ ಅಭಿವೃದ್ದಿ ಚರ್ಚೆಗಾಗಿಯೇ ಮೀಸಲಿಟ್ಟಿದ್ದು ಶ್ಲಾಘನೀಯ.

ಆದರೆ ಸದನದಲ್ಲಿ ಗಣಿ ಕುರಿತ ಚರ್ಚೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಸಿಬಿಐ ತನಿಖೆಗೆ ಪಟ್ಟು ಹಿಡಿದು ಕೋಲಾಹಲ ಎಬ್ಬಿಸಿತ್ತು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಜನಾರ್ದನ ರೆಡ್ಡಿಯವರು ಇಡೀ ಸದನದ ಕಲಾಪಗಳನ್ನು ವೈಯಕ್ತಿಕ ಪ್ರತಿಷ್ಠೆಯ ಕಣವನ್ನಾಗಿ ಮಾಡಿಕೊಂಡು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿರುವುದ್ದು ನಾಚಿಕೆಗೇಡಿನ ವಿಷಯ.

ಕೊನೆಗೂ ಅಕ್ರಮ ಗಣಿಗಾರಿಕೆಯನ್ನು ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ ಮೇಲೆ ಪ್ರತಿಪಕ್ಷಗಳು ತಮ್ಮ ಕೂಗಾಟವನ್ನು ನಿಲ್ಲಿಸಿದ್ದವು. ಆಕ್ರಮ ಗಣಿಗಾರಿಕೆ ಕುರಿತಂತೆ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆಯವರು ನೀಡಿದ ವರದಿಯಲ್ಲಿ, ಬಿಜೆಪಿಯ ಸಚಿವ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಹಾಗೂ ಕಾಂಗ್ರೆಸ್‌ನ ಧರಂಸಿಂಗ್ ಅವರ ಬಗ್ಗೆಯೂ ಸಾಕಷ್ಟು ದಾಖಲೆಗಳನ್ನು ನೀಡಿ ಅವರ ವಿರುದ್ಧ ಯಾಕೆ ಕಾನೂನು ಕ್ರಮ ಕೈಗೊಳ್ಳಬಾರದು ಎಂಬುದಾಗಿಯೂ ತಿಳಿಸಿದ್ದರು. ಹಾಗಾದರೆ ಅಧಿವೇಶನದ ಕಲಾಪದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾವುದು ಕೂಡ ಲೋಕಾಯುಕ್ತರ ವರದಿ ಬಗ್ಗೆ ಗಟ್ಟಿಯಾಗಿ ಮಾತನಾಡಲೇ ಇಲ್ಲ !

ಅಷ್ಟೆಲ್ಲಾ ಬೊಂಬಡ ಬಜಾಯಿಸಿದ ಪ್ರತಿಪಕ್ಷಗಳು ಅಕ್ರಮ ಗಣಿಗಾರಿಕೆ ಬಗ್ಗೆ ಲೋಕಾಯುಕ್ತರು ನೀಡಿದ ವರದಿ ಕುರಿತೇ ಗಂಭೀರವಾಗಿ ಚರ್ಚೆ ನಡೆಸಬೇಕಿತ್ತು, ಅದನ್ನು ಬಿಟ್ಟು ಮತ್ತೆ ಸಿಬಿಐ, ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸುವ ಅಗತ್ಯವಾದರೂ ಏನಿದೆ ? ಈಗಾಗಲೇ ತನಿಖೆ ನಡೆಸಿರುವ ವರದಿ ಲೆಕ್ಕಕ್ಕಿಲ್ಲ ಎಂದಾದ ಮೇಲೆ ಲೋಕಾಯುಕ್ತ ವರದಿಯ ಔಚಿತ್ಯವಾದರು ಏನು ? ಈಗಾಗಲೇ ಸರ್ಕಾರದ ಮುಂದೆ ಅದೆಷ್ಟು ಆಯೋಗದ ವರದಿಗಳಿವೆ, ಅವೆಲ್ಲ ಯಾಕಾಗಿ...ಕಣ್ಣೊರೆಸುವ ತಂತ್ರವೇ ?...

ಹೋಗಲಿ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕಿದೆ, ಗಡಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಸಾಕಷ್ಟು ಗಲಾಟೆಗಳು ನಡೆದವು ಆ ಬಗ್ಗೆಯೂ ಮಹತ್ವದ ಚರ್ಚೆ ನಡೆಯಲೇ ಇಲ್ಲ. ಹೋದ ಪುಟ್ಟ...ಬಂದ ಪುಟ್ಟ ಎಂಬ ಗಾದೆಯಂತೆ ಉತ್ತರ ಕರ್ನಾಟಕ ಅಭಿವೃದ್ದಿಗೆ ಸರ್ಕಾರ ಬದ್ದ ಎಂಬುದಾಗಿ ಹೇಳಿ, 1,200 ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಿ, ನಂಜುಂಡಪ್ಪ ವರದಿ ಜಾರಿಗೂ ಬದ್ದ ಎಂದು ಹೇಳುವ ಮೂಲಕ ಅಧಿವೇಶನಕ್ಕೆ ತೆರೆ ಬಿದ್ದಿತ್ತು.

ಈಗಾಗಲೇ ಗಡಿಭಾಗದ ಸೊಲ್ಲಾಪುರ, ಅಕ್ಕಲಕೋಟೆ ಕನ್ನಡಿಗರು ಕೃಷಿಯನ್ನು ನೆರೆಯ ರಾಜ್ಯದ ಕೃಪಾಕಟಾಕ್ಷದಿಂದ ಲಾಭದಾಯಕವನ್ನಾಗಿ ಮಾಡಿಕೊಂಡಿದ್ದಾರೆ. ಗಡಿಭಾಗದ ಸಮೀಪವೇ ಇರುವ ಮಹಾರಾಷ್ಟ್ರದ ರಸ್ತೆ,ಶಾಲೆಗಳು ಉತ್ತಮ ಸೌಲಭ್ಯ ಹೊಂದಿದೆ. ಆದರೆ ವಿಪರ್ಯಾಸವೆಂದರೆ ಗಡಿಯಂಚಿನ ಹಳ್ಳಿಯ ರಸ್ತೆಗಳು, ಶಾಲೆಗಳು ನರಕಸದೃಶವಾಗಿವೆ. ಗಡಿಭಾಗದ ಕಬ್ಬು ಬೆಳೆಗಾರರ ಉತ್ತಮ ಬೆಲೆಯನ್ನೇ ಈವರೆಗೂ ಪಡೆದಿಲ್ಲ. ಆ ಬೆಲೆ ಸಿಗಬೇಕಿದ್ದರೆ ಈ ರೈತರು ಮಹಾರಾಷ್ಟ್ರಕ್ಕೆ ಹೋಗಬೇಕು!!
ವೋಟ್ ಬ್ಯಾಂಕ್ ರಾಜಕಾರಣ ಮಾಡುವ ರಾಜಕಾರಣಿಗಳು ಮೊದಲು ಗಡಿಭಾಗದಲ್ಲಿನ ಜನರಿಗೆ ಮೂಲಭೂತ ಸೌಕರ್ಯ, ರೈತರಿಗೆ, ಅವರು ಬೆಳೆದ ಬೆಳೆಗಳ ಬಗ್ಗೆ ಮೊದಲ ಆದ್ಯತೆ ನೀಡಬೇಕು. ಕರ್ನಾಟಕದ ದೌರ್ಬಲ್ಯವನ್ನು ಚೆನ್ನಾಗಿ ಉಪಯೋಗಿಸಿಕೊಂಡಿರುವ ಎಂಇಎಸ್ ಇಲ್ಲಿನ ಮರಾಠಿಗರ ಮೇಲೆ ತನ್ನ ಹಿಡಿತ ಸಾಧಿಸಲು ಸಾಧ್ಯವಾಗಿದೆ.

ಕೇವಲ ಉತ್ತರಕರ್ನಾಟಕದ ಅಭಿವೃದ್ದಿಗಾಗಿ ಅಧಿವೇಶನ ನಡೆಸುತ್ತೇವೆ ಎಂದರೇ ಸಾಕೆ ? ಈಗ ವಿರೋಧಪಕ್ಷದಲ್ಲಿ ಕುಳಿತಿರುವ ಕಾಂಗ್ರೆಸ್ ಈ ಹಿಂದೆ ಮಾಡಿದ್ದಾದರೂ ಏನು ಎಂಬುದಕ್ಕೆ ರಾಜ್ಯದ ಗಡಿಭಾಗದ ಹಳ್ಳಿಗಳು ಜ್ವಲಂತ ಸಾಕ್ಷಿಯಾಗಿ ನಿಂತಿವೆ. ಆ ನೆಲೆಯಲ್ಲಿ ವಿರೋಧ ಪಕ್ಷ ಹಾಗೂ ಆಡಳಿತರೂಢ ಪಕ್ಷಗಳು ಉತ್ತರ ಕರ್ನಾಟಕ ಅಭಿವೃದ್ದಿ, ನೀರಾವರಿ, ರೈತರ ಬಗ್ಗೆ, ಭಯೋತ್ಪಾದನೆ ಬಗ್ಗೆ ತಲೆದೂಗುವಂತಹ ಚರ್ಚೆ ನಡೆಯಲೇ ಇಲ್ಲ. ಅದೇ ರೀತಿ ಕನ್ನಡ ನಾಡು,ನುಡಿ, ಜಲದ ಬಗ್ಗೆ ಮಾತನಾಡುವ ರಾಜಕಾರಣಿಗಳು, ಈವರೆಗೆ 74 ಸಾಹಿತ್ಯ ಸಮ್ಮೇಳನಗಳು ನಡೆದಿದ್ದು, ಆ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗುತ್ತದೆ ಆ ಬಗ್ಗೆ ಯಾವುದಾದರು ಚರ್ಚೆ ನಡೆಯಿತಾ ಅದೂ ಇಲ್ಲ. 75ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ಎಲ್.ಬಸವರಾಜು ಅವರು ಇತ್ತೀಚೆಗೆ ಪಾಕ್ಷಿಕ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಕಟ್ಟಡಗಳು ಧ್ವಂಸವಾದರೆ ಕಟ್ಟಬಹುದು, ಆದರೆ ನೆಲದ ಸಂಸ್ಕೃತಿ, ಪ್ರಜಾಪ್ರಭುತ್ವವೇ ನೆಲಕಚ್ಚಿದರೆ ಹೇಗೆ ಎಂಬ ಆತಂಕವನ್ನು ಹೊರಹಾಕಿದ್ದಾರೆ. ಈ ಬಗ್ಗೆಯೂ ರಾಜಕಾರಣಿಗಳು ಗಂಭೀರವಾಗಿ ಚಿಂತನೆ ನಡೆಸಬೇಕಾದ ಅಗತ್ಯವಿದೆ.

Sunday, November 30, 2008

ಉಗ್ರರ ದಾಳಿ ಮತ್ತು ಲಜ್ಜೆಗೆಟ್ಟ ರಾಜಕಾರಣಿಗಳು....

ಆರ್ಥಿಕ ವಹಿವಾಟಿನ ಬೆನ್ನಲುಬಾಗಿರುವ ವಾಣಿಜ್ಯ ನಗರಿ ಮುಂಬೈಯಲ್ಲಿ 1993ರಲ್ಲಿ ಖತರ್‌ನಾಕ್ ಉಗ್ರರು ಸರಣಿ ಬಾಂಬ್ ಸ್ಫೋಟದ ದಾಳಿ ನಡೆಸಿದ್ದರು. ಈ ಸ್ಫೋಟ ಸಂಭವಿಸಿ 15ವರ್ಷಗಳಾಗುತ್ತ ಬಂತು. ಆ ಘಟನೆಯಿಂದ ಆರಂಭಿಸಿ ಈವರೆಗೂ ದೇಶಾದ್ಯಂತ ಉಗ್ರರು ಅಮಾಯಕರ ಪ್ರಾಣದೊಂದಿಗೆ ಚೆಲ್ಲಾಟವಾಡುತ್ತಲೇ ತಮ್ಮ ದುಷ್ಕೃತ್ಯದ ಅಟ್ಟಹಾಸವನ್ನು ಮುಂದುವರಿಸಿದ್ದಾರೆ. ಪ್ರತಿ ಸಂದರ್ಭದಲ್ಲೂ ನಮ್ಮ ಲಜ್ಜೆಗೆಟ್ಟ ರಾಜಕಾರಣಿಗಳು ಇಂತಹದ್ದೊಂದು ಘಟನೆ ನಡೆಯಬಾರದಿತ್ತು, ಕೆಲವು ತಿಂಗಳ ಹಿಂದೆಯೇ ಗುಪ್ತಚರ ಇಲಾಖೆಗೆ ಮಾಹಿತಿ ದೊರಕಿತ್ತು, ಇನ್ನು ಮುಂದೆ ಇಂತಹ ಘಟನೆ ಸಂಭವಿಸಿದಂತೆ ಎಚ್ಚರ ವಹಿಸುತ್ತೇವೆ ಎಂಬಂತಹ ಎಡಬಿಡಂಗಿತನದ ಹೇಳಿಕೆ ನೀಡುತ್ತಲೇ ನಪುಂಸಕ ರಾಜಕಾರಣಿಗಳು ಐಷಾರಾಮವಾಗಿ ಕಾಲ ಕಳೆಯುತ್ತಿರುವುದನ್ನು ನೋಡಿದರೆ ಅಹಸ್ಯ ಮೂಡಿಸುತ್ತೆ.

ಅಮೆರಿಕದ ಪ್ರಮುಖ ವಾಣಿಜ್ಯ ಕೇಂದ್ರವಾದ ವರ್ಲ್ಡ್ ಟ್ರೇಡ್ ಸೆಂಟರ್ ಮೇಲೆ 2001 ಸೆಪ್ಟೆಂಬರ್ 11ರಂದು ಉಗ್ರರು ದಾಳಿ ನಡೆಸುವ ಮೂಲಕ ವಿಶ್ವದ ದೊಡ್ಡಣ್ಣ ಎನ್ನಿಸಿಕೊಂಡ ದೇಶವೇ ಬೆಚ್ಚಿ ಬಿದ್ದಿತ್ತು. ಹಾಗಂತ ಆ ದೇಶದ ರಾಜಕಾರಣಿಗಳು, ಅಧ್ಯಕ್ಷರು ಪಡಪೋಷಿತನ ತೋರಿಸಿಲ್ಲ, ಆ ಘಟನೆಯ ಬಳಿಕ ಅಲ್ ಕೈದಾ, ತಾಲಿಬಾನ್ ಎಷ್ಟೇ ಗಂಟಲು ಹರಿದುಕೊಂಡರು ಕೂಡ ಅಮೆರಿಕದ ಕೂದಲನ್ನು ಎರಡನೇ ಬಾರಿ ಕೊಂಕಿಸಲು ಸಾಧ್ಯವಾಗಿಲ್ಲ.

ಅವೆಲ್ಲಕ್ಕಿಂತ ಚಿಂತಿಗೀಡು ಮಾಡುವ ವಿಷಯ ಏನೆಂದರೆ, ಕಳೆದ ಎರಡು-ಮೂರು ವರ್ಷಗಳಿಂದ ಉಗ್ರರು ಲೀಲಾಜಾಲವಾಗಿ ಸ್ಫೋಟ ಕೃತ್ಯವನ್ನು ಎಸಗುತ್ತಲೇ ಇದ್ದರೂ ಕೂಡ, ಜನಸಾಮಾನ್ಯರಿಗೆ ವ್ಯವಸ್ಥಿತ ರಕ್ಷಣೆ ನೀಡಲು ಇನ್ನೂ ಸಾಧ್ಯವಾಗಿಲ್ಲ. ತಾಜ್, ಒಬೆರಾಯ್ ಹಾಗೂ ನಾರಿಮನ್ ಹೌಸ್‌ಗಳೊಳಗೆ ನುಗ್ಗಿದ ಉಗ್ರರು ಮನಬಂದಂತೆ ಗುಂಡಿನ ಸುರಿಮಳೆಗೆರೆದಿದ್ದಾರೆ. ಈ ಘಟನೆ ನ.27ರ ರಾತ್ರಿ 9.30ಕ್ಕೆ, ಘಟನೆ ನಡೆದಾಗ ಮಹಾರಾಷ್ಟ್ರ ಮುಖ್ಯಮಂತ್ರಿ ವಿಲಾಸ್ ರಾವ್ ದೇಶ್‌ಮುಖ್ ಅವರು ಕೇರಳದಲ್ಲಿದ್ದರು. ವಿಷಯ ತಿಳಿದ ಮುಂಬೈಗೆ ವಾಪಸಾಗಿ, ರಾತ್ರಿ 11ಗಂಟೆಗೆ ನರಸತ್ತ ಗೃಹಸಚಿವ ಶಿವರಾಜ್ ಪಾಟೀಲ್ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಸುಮಾರು 200ಎನ್‌ಎಸ್‌ಜಿ ಕಮಾಂಡೋಗಳನ್ನು ಕಳುಹಿಸುವಂತೆ ಮನವಿ ಮಾಡಿದ್ದರು.

ಅಷ್ಟರಲ್ಲಿ ಹಲವಾರು ಮಂದಿ ಎನ್ಎಸ್‌ಜಿ ಕಮಾಂಡೋಗಳು ನಿದ್ರೆಗೆ ಶರಣಾಗಿದ್ದರು, ಎನ್ಎಸ್‌ಜಿಗೆ ವಿಷಯ ತಿಳಿಯುತ್ತಿದ್ದಂತೆಯೇ ಎಲ್ಲೂ ಪೂರ್ವ ತಯಾರಿಯೊಂದಿಗೆ ತಯಾರಾಗುವಾಗ, ಐಎಲ್-76ವಿಮಾನ ಇಂಧನ ತುಂಬಿಸಿಕೊಂಡು ಬರುವಾಗ ರಾತ್ರಿ 2ಗಂಟೆ ಕಳೆದಿತ್ತು! ಆ ಬಳಿಕ ದೆಹಲಿಗೆ ಆಗಮಿಸಿ, ಬಸ್ ಏರುವ ಹೊತ್ತಿಗೆ ಬೆಳಗಿನ ಜಾವ 5.25, ನಂತರ ಎರಡು ತಂಡಗಳಾಗಿ ತಾಜ್, ಒಬೆರಾಯ್‌ನಲ್ಲಿ ಕಾರ್ಯಾಚರಣೆಗೆ ತೊಡಗಿದಾಗ ಸಮಯ 7 ಗಂಟೆ. ಅಂದರೆ ಘಟನೆ ನಡೆದು 10ಗಂಟೆಯ ಬಳಿಕ ಕಾರ್ಯಾಚರಣೆ ಆರಂಭವಾಗಿತ್ತು. ನಮ್ಮ ರಕ್ಷಣಾ ವ್ಯವಸ್ಥೆಯ ಕಥೆ ಯುದ್ದ ಕಾಲೇ ಶಸ್ತ್ರಾಸ್ತ್ರಭ್ಯಾಸ ಎಂಬಂತಾಗಿದೆ. ಇಲ್ಲಿ ನಾನು ಎನ್‌ಎಸ್‌ಜಿಯನ್ನು ತೆಗಳುತ್ತಿಲ್ಲ. ಏನೇ ಆದರು ಶಂಖದಿಂದ ತೀರ್ಥ ಎಂಬಂತೆ, ದೆಹಲಿಯಿಂದ ಕಮಾಂಡೋ ಪಡೆ ಆಗಮಿಸಿ ಉಗ್ರರನ್ನು ಸದೆಬಡಿಯುವುದರೊಳಗೆ ಅವರೇನು ಕಡಲೆ ತಿನ್ನುತ್ತ ಕೂತಿರುತ್ತಾರಾ? ಅದೇ ರೀತಿ ಇತ್ತೀಚೆಗಷ್ಟೇ ಹುಬ್ಬಳ್ಳಿ ಸಮೀಪದ ಕಿರು ಸೇತುವೆಯೊಂದರ ಬಳಿ ಬಾಂಬ್ ಪತ್ತೆಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂದೇಶ ರವಾನಿಸಲಾಗಿತ್ತು, ಆದರೆ ಬಾಂಬ್ ನಿಷ್ಕ್ರಿಯ ದಳ ಇರುವುದು ಬೆಂಗಳೂರಿನಲ್ಲಿ. ಅವರು ತಯಾರಿ ನಡೆಸಿ ಆ ಸ್ಥಳ ತಲುಪುವಾಗ ರಾತ್ರಿ 8ಗಂಟೆ ಕಳೆದಿತ್ತು!!...

ಇಷ್ಟೆಲ್ಲಾ ಸ್ಫೋಟ, ದಾಳಿ ನಡೆಯುತ್ತಿದ್ದರೂ ಕೂಡ ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ, ಮಾಧ್ಯಮಗಳ ಮೂಲಕ ಹೇಳಿಕೆ ನೀಡುವುದು ಮತ್ತೆ ಸುಮ್ಮನಾಗುವುದು. ಮತ್ತೊಂದು ಅಂತಹುದೇ ದಾಳಿ ನಡೆದಾಗ ಮತ್ತೆ ಎಚ್ಚೆತ್ತುಕೊಳ್ಳುವುದು. ಹೀಗೆ ನಡೆದರೆ ಇನ್ನು ಮುಂದೆ ಎಲ್ಲಿಯೂ ನೆಮ್ಮದಿಯಿಂದ ತಿರುಗಾಡಲು ಸಾಧ್ಯವಿಲ್ಲದಂತಾಗುವ ಪರಿಸ್ಥಿತಿ ದೂರವಿಲ್ಲ ಎಂದೇ ಹೇಳಬೇಕಾಗುತ್ತದೆ. ಆಹಾ ಸೆಕ್ಯುಲರ್ ಇಂಡಿಯಾ, ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ದೈನೇಸಿ ಸ್ಥಿತಿ ನೋಡಿ, ಭಯೋತ್ಪಾದನೆ, ದೇಶದ್ರೋಹದಂತಹ ಬೀಭತ್ಸ ಘಟನೆ ಎಲ್ಲೆಂದರಲ್ಲಿ ರಣಕೇಕೆ ಹಾಕುತ್ತಿದ್ದರೆ, ದರಿದ್ರ ರಾಜಕಾರಣಿಗಳು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಲೇ ಅಮಾಯಕರ ರಕ್ತಹೀರುವ ಉಗ್ರರ ಕೃತ್ಯಕ್ಕೆ ಇವರು ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ ಎಂದೇ ಹೇಳಬೇಕು. ಅದಿಲ್ಲದಿದ್ದರೆ ಭಯೋತ್ಪಾದನೆ ನಿಗ್ರಹಕ್ಕೆ ಕಠಿಣ ಕಾಯ್ದೆಯೊಂದನ್ನು ಜಾರಿಗೆ ತರಬೇಕು ಎಂಬ ಕೂಗಿಗೆ ಕಿವುಡರಂತೆ, ಈಗ ಇರುವ ನಮ್ಮ ಕಾನೂನೇ ಉಗ್ರರನ್ನು ಸದೆಬಡಿಯಲು ಬಲಿಷ್ಠವಾಗಿದೆ ಎಂಬ ಪೌರುಷದ ಮಾತುಗಳನ್ನಾಡುತ್ತಿದ್ದಾರೆ.
ಪೋಟಾ ಬೇಡ, ಟಾಡಾ ಬೇಡ, ಫೆಡರಲ್ ಏಜೆನ್ಸಿ ಬೇಡ ಎಂದೆನ್ನುವ ಈ ಕಚ್ಚೆಹರುಕ ರಾಜಕಾರಣಿಗಳಿಗೆ ಮಾತ್ರ ಎನ್ಎಸ್‌ಜಿ ಬ್ಲಾಕ್ ಕಮಾಂಡೋಗಳ ಭದ್ರಕೋಟೆಯ ರಕ್ಷಣೆ ಬೇಕು. ಅಲ್ಲದೇ ಈ ಮೊದಲು ಉಗ್ರರು ನಡೆಸುತ್ತಿರುವ ದಾಳಿಯ ವೈಖರಿಯೇ ಬದಲಾಗಿದೆ ಎಂದ ಮೇಲೆ ನಮ್ಮ ಒಬಿರಾಯನ ಕಾಲದ ರಕ್ಷಣಾ ವ್ಯವಸ್ಥೆ ಹಾಗೂ ಎಡಬಿಡಂಗಿ ಹೇಳಿಕೆ ನೀಡುತ್ತಲೇ ಕಾಲ ಕಳೆಯುತ್ತಿದ್ದರೆ ಜನಸಾಮಾನ್ಯರ ಗತಿ ಏನು? ಹಾಗೇ ಸ್ಫೋಟ ಕೃತ್ಯದ ಪ್ರಾಯಶ್ಚಿತ್ತ ಎಂಬಂತೆ ಗೃಹಸಚಿವ, ಮುಖ್ಯಮಂತ್ರಿ ತಲೆದಂಡದಿಂದ ಅದ್ಯಾವ ಪುರುಷಾರ್ಥ ಸಾಧ್ಯ.....